ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ನೆರವು: ವಾರದೊಳಗೆ ತೀರ್ಮಾನ ಮಾಡುವುದಾಗಿ ಸುಪ್ರೀಂಕೋರ್ಟ್‌ಗೆ ಕೇಂದ್ರದ ವಾಗ್ದಾನ

Published 22 ಏಪ್ರಿಲ್ 2024, 21:11 IST
Last Updated 22 ಏಪ್ರಿಲ್ 2024, 21:11 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಬರ ನಿರ್ವಹಣೆಗಾಗಿ ಹಣಕಾಸು ನೆರವು ನೀಡುವ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿ ಮತ್ತೊಂದು ಮಜಲು ತಲುಪಿದ್ದು, ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿದೆ.

ಕೋರ್ಟ್‌ನಲ್ಲಿ ವಿಚಾರಣೆ ಕಾಲಕ್ಕೆ, ‘ಕರ್ನಾಟಕದಲ್ಲಿ ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ’ ಎಂದು ಕೇಂದ್ರ ಮಾಹಿತಿ ನೀಡಿದೆ. ‘ಇದು ರಾಜ್ಯಕ್ಕೆ ಸಿಕ್ಕಿರುವ ಜಯ’ ಎಂದು ಪ್ರತಿಪಾದಿಸಿರುವ ರಾಜ್ಯ ಸರ್ಕಾರ, ‘ವಾರದೊಳಗೆ ಬರ ಪರಿಹಾರ ಬಿಡುಗಡೆಯಾಗಲಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯ ಪ್ರವೇಶದಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ’ ಎಂದು ಅಭಿಪ್ರಾಯಪಟ್ಟಿದೆ.

2023ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ, ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುದೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ. ಇದೊಂದು ಮೈಲಿಗಲ್ಲು.
–ಸಿದ್ದರಾಮಯ್ಯ, ಮುಖ್ಯಮಂತ್ರಿ

ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಅದಕ್ಕೆ ಸ್ಪಂದನೆ ಸಿಗದೇ ಇದ್ದುದರಿಂದ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದ್ದು, ರಾಜ್ಯಕ್ಕೆ ದ್ರೋಹ ಎಸಗಿದೆ’ ಎಂದು ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಬರಪರಿಹಾರ, ತೆರಿಗೆ ನ್ಯಾಯಕ್ಕಾಗಿ ದೆಹಲಿಯಲ್ಲಿ ಪ್ರತಿಭಟನೆಯನ್ನೂ ಸರ್ಕಾರ ನಡೆಸಿತ್ತು. ವಿಳಂಬವಾಗಿ ಮನವಿ ಸಲ್ಲಿಸಿದ್ದಕ್ಕೆ ಪರಿಹಾರ ನೀಡಲು ಸಾಧ್ಯವಾಗಿಲ್ಲ; ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಹಲವು ಬಾರಿ ಹೇಳಿತ್ತು. ಬಳಿಕವೂ ‘ಸಂಘರ್ಷ’ ಮುಂದುವರಿದಿತ್ತು. 

ಈ ಬೆಳವಣಿಗೆಗಳ ಬಳಿಕ ರಾಜ್ಯ ಸರ್ಕಾರ, ಬರ ಪರಿಹಾರ ಕೊಡಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಸೋಮವಾರ ಈ ಅರ್ಜಿ ಸುಪ‍್ರೀಂಕೋರ್ಟ್‌ ‍‍‍ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಬರ ಪರಿಹಾರ ಬಿಡುಗಡೆ ಮಾಡದೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಈ ರಾಜ್ಯಕ್ಕೆ ಕಾಲಿಡಬಾರದು. ಬಂದರೆ, ಇಲ್ಲಿನ ಜನರೇ ಪ್ರತಿಭಟನೆ ನಡೆಸಲಿದ್ದಾರೆ. ಅವರಿಗೆ ಇಲ್ಲಿ ಒಂದು ಸೀಟೂ ಸಿಗದು. ಮೋದಿ ಮತ್ತು ಶಾ ರಾಜ್ಯಕ್ಕೆ ಅನ್ಯಾಯ ಮಾಡಿದ್ದರು. ಕೊನೆಗೂ ನ್ಯಾಯಕ್ಕೆ ಜಯವಾಗಿದೆ. ಪ್ರಧಾನಿಯ ಅಹಂಕಾರ ಹಾಗೂ ಅವರ ದ್ವೇಷ ರಾಜಕಾರಣ ಸೋತಿದೆ.
–ರಣದೀಪ್‌ ಸಿಂಗ್‌ ಸುರ್ಜೇವಾಲಾ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್‌) ಬರ ‍‍ಪರಿಹಾರವಾಗಿ ₹18,171 ಕೋಟಿಯನ್ನು ತಕ್ಷಣ ಹಣ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಏಪ್ರಿಲ್‌ 8ರಂದು ನಡೆಸಿದ್ದ ಬಿ.ಆರ್‌.ಗವಾಯಿ ಹಾಗೂ ಸಂದೀಪ್‌ ಮೆಹ್ತಾ ಅವರಿದ್ದ ಪೀಠ, ‘ಅನುದಾನ ಬಿಡುಗಡೆ ಸೇರಿದಂತೆ ಯಾವುದೇ ವಿಷಯದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ಸಲ್ಲದು’ ಎಂದು ಕಿವಿಮಾತು ಹೇಳಿತ್ತು. ರಾಜ್ಯದ ಬೇಡಿಕೆ ಬಗ್ಗೆ ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವುದಾಗಿ ಕೇಂದ್ರ ತಿಳಿಸಿತ್ತು. 

ಸೋಮವಾರ ವಿಚಾರಣಾ ಪೀಠದ ಮುಂದೆ ಹಾಜರಾದ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ, ‘ಇದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಪೀಠದ ಮುಂದೆ ಈ ವಿಷಯದ ಬಗ್ಗೆ ವಾದದ ಅಗತ್ಯವಿಲ್ಲ. ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು. ಈ ವಿಷಯವನ್ನು ಮುಂದಿನ ಸೋಮವಾರ ಪರಿಗಣಿಸುವಂತೆ ಪೀಠವನ್ನು ಕೋರಿದರು. ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಅಟಾರ್ನಿ ಜನರಲ್ ಅವರ ಸಲಹೆಗೆ ಒಪ್ಪಿಗೆ ಸೂಚಿಸಿದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಇದೆಲ್ಲವೂ ಸೌಹಾರ್ದಯುತವಾಗಿ ನಡೆಯಬೇಕು.
–ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸಂದೀಪ್‌ ಮೆಹ್ತಾ ಪೀಠ

ರಾಜ್ಯ ಸರ್ಕಾರದ ಅರ್ಜಿಯಲ್ಲಿ ಏನಿತ್ತು?: ‘ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. ಮೂರು ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ, ಕಾನೂನು ಬದ್ಧವಾಗಿ ರಾಜ್ಯಕ್ಕೆ ಬರಬೇಕಾದ ಹಣದಲ್ಲಿ ನಯಾಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಈ ಬಗ್ಗೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರಾಜ್ಯವು ಸುಪ್ರೀಂ ಕೋರ್ಟ್‌ನ ಕದ ತಟ್ಟಿತ್ತು.

‘ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ತಂಡವು ರಾಜ್ಯದಲ್ಲಿ ಪರಿಶೀಲನೆ ನಡೆಸಿ ವರದಿ ನೀಡಿದೆ. ಈ ವರದಿ ನೀಡಿದ ಒಂದು ತಿಂಗಳಲ್ಲಿ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ರಾಜ್ಯದ ಜನರಿಗೆ ಸ್ಪಂದಿಸಿಲ್ಲ’ ಎಂದು ರಾಜ್ಯ ಆರೋಪಿಸಿತ್ತು. 

ಬರ ‍ಪರಿಹಾರದ ವಿಷಯದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸಿತ್ತು. ನಮ್ಮ ರೈತರನ್ನು ಏಳು ತಿಂಗಳ ಕಾಲ ಸತಾಯಿಸಿತ್ತು. ಕೇಂದ್ರ ತಂಡ ವರದಿ ನೀಡಿದ ಒಂದು ತಿಂಗಳಲ್ಲಿ ಪರಿಹಾರ ನೀಡಬೇಕೆಂಬ ನಿಯಮ ಇದೆ. ಆದರೆ, ಕೇಂದ್ರ ಸರ್ಕಾರ ಅನ್ಯಾಯ ಮಾಡಿತ್ತು. ಇದೀಗ ರಾಜ್ಯ ಸರ್ಕಾರದ ಕಾನೂನು ಸಮರಕ್ಕೆ ಹಾಗೂ ರಾಜ್ಯದ ಜನತೆಗೆ ನ್ಯಾಯ ಸಿಕ್ಕಿದೆ. 
–ಕೃಷ್ಣ ಬೈರೇಗೌಡ, ಕಂದಾಯ ಸಚಿವ 
2023–24ನೇ ಸಾಲಿನಲ್ಲಿ ಕರ್ನಾಟಕಕ್ಕೆ ನರೇಗಾ ಯೋಜನೆ ಅಡಿ ಒಟ್ಟು 13 ಕೋಟಿ ಮಾನವ ದಿನಗಳಷ್ಟು (ಎಂಟು ಗಂಟೆಗಳ ಒಂದು ಕೆಲಸವನ್ನು ಒಂದು ಮಾನವ ದಿನ ಎಂದು ಪರಿಗಣಿಸಲಾಗುತ್ತದೆ. 100 ಮಂದಿ ಒಂದೇ ದಿನದಲ್ಲಿ ಎಂಟು ತಾಸು ಕೆಲಸ ಮಾಡಿದರೆ, ಅದನ್ನು 100 ಮಾನವ ದಿನಗಳು ಎಂದು ಪರಿಗಣಿಸಲಾಗುತ್ತದೆ) ಉದ್ಯೋಗವನ್ನು ಕೇಂದ್ರ ಸರ್ಕಾರವು ಹಂಚಿಕೆ ಮಾಡಿತ್ತು. ತೀವ್ರ ಬರದ ಸ್ಥಿತಿ ಇರುವ ಕಾರಣದಿಂದ ರಾಜ್ಯ ಸರ್ಕಾರವು ಈಗಾಗಲೇ 12.40 ಕೋಟಿ ಮಾನವ ದಿನಗಳಷ್ಟು ಉದ್ಯೋಗವನ್ನು ಒದಗಿಸಿದೆ. ಈ ಆರ್ಥಿಕ ವರ್ಷದ ಅಂತ್ಯದವರೆಗೆ ರಾಜ್ಯದ ಜನರಿಗೆ ಉದ್ಯೋಗ ಖಾತರಿಯನ್ನು ಒದಗಿಸಲು ಇನ್ನೂ ಹೆಚ್ಚುವರಿಯಾಗಿ 5 ಕೋಟಿ ಮಾನವ ದಿನಗಳವರೆಗೆ ವಿಸ್ತರಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT