ಬೆಂಗಳೂರು: 72ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ಮೈದಾನದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ರಾಜ್ಯದ ಜನರಿಗೆಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ’ಭರತ ಭೂಮಿ ನನ್ನ ತಾಯಿ ನನ್ನ ಪೊರೆವ ತೊಟ್ಟಿಲು, ಜೀವನವೇ ದೇವಿಗೆರೆವೆ ಬಿಡುತೆ ಗುಡಿಯ ಕಟ್ಟಲು’ ಎಂಬ ರಾಷ್ಟ್ರಕವಿ ಕುವೆಂಪು ಅವರ ಕವನವನ್ನು ಉಲ್ಲೇಖಿಸಿ ಭಾಷಣ ಆರಂಭಿಸಿದರು.
ಮಹಾತ್ಮ ಗಾಂಧಿ 150ನೇ ವರ್ಷದ ಆಚರಣೆ ಪ್ರಯುಕ್ತ 'ಗಾಂಧಿ 150 ಒಂದು ರಂಗ ಪಯಣ'. ಶೀರ್ಷಿಕೆಯಡಿ ರಾಜ್ಯದಾದ್ಯಂತ 1000 ರಂಗ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಸ್ವಾಮಿ ವಿವೇಕಾನಂದ ಅವರು ಷಿಕಾಗೊದ ಸರ್ವಧರ್ಮ ಸಮ್ಮೇಳನದಲ್ಲಿ ಭಾಷಣ ಮಾಡಿದ 125ನೇ ವರ್ಷಾಚರಣೆಯನ್ನು ಆಚರಿಸಲಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಸರ್ಕಾರ ಅಖಂಡ ಕರ್ನಾಟಕ ಅಭಿವೃದ್ಧಿಗೆ ಬದ್ದವಾಗಿದೆ.ಬೆಳಗಾವಿಗೆ ಕೆಲವು ಇಲಾಖೆ ಕಚೇರಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದರು.
ರೈತರ ₹ 49000 ಕೋಟಿ ಸಾಲಮನ್ನಾ ಮಾಡಲಾಗಿದೆ.ರೈತರಿಗೆ ಆಧುನಿಕ ಕೃಷಿ ಮಾಹಿತಿ ನೀಡುವಲ್ಲಿ ಜಿಲ್ಲೆಯಲ್ಲಿ ಪ್ರತಿ ತಿಂಗಳು 'ರೈತ ಸ್ಪಂದನ' ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಡಾ. ಎಚ್. ನರಸಿಂಹಯ್ಯ ಹೆಸರಿನಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲಾಗುವುದು.ಸರ್ಕಾರಿ ಶಾಲೆಗಳ ಆಧುನೀಕಣ ಮಾಡಲಾಗುವುದು,ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ಕಾಲೇಜು ಸ್ಥಾಪನೆ ಮಾಡಲಾಗುವುದು. ಹಾಗೇಕಲಿತ ಶಾಲೆಯ ಅಭಿವೃದ್ಧಿಗೆ ನೆರವಾಗುವವರಿಗೆ ಪೋರ್ಟಲ್ ಸ್ಥಾಪಿಸಿ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.
ಸೌರವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುವುದು.ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಏಕೀಕೃತ ಭೂಸಾರಿಗೆ ಪ್ರಾಧಿಕಾರ ಸ್ಥಾಪನೆ ಮಾಡಿ ದಟ್ಟಣೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುವುದು.
ಸಾಮಾಜಿಕ ಅರಣ್ಯ ಬೆಳವಣಿಗೆಗೆ 'ಹಸಿರು ಕರ್ನಾಟಕ ' ಯೋಜನೆ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿ 3831 ಕಿ.ಮೀ ಹೆದ್ದಾರಿ ಅಭಿವೃದ್ಧಿ ಮಾಡಲಾಗುವುದು ಎಂದರು.
ಜಿಲ್ಲಾಧಿಕಾರಿಗಳು ತಿಂಗಳಿಗೊಮ್ಮೆ ತಾಲ್ಲೂಕಿನಲ್ಲಿ ಸಮೀಕ್ಷಾ ಸಭೆ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕು. ತಿಂಗಳಿನಲ್ಲಿ ಒಮ್ಮೆ ಹೋಬಳಿ ಮಟ್ಟದಲ್ಲಿ ವಾಸ್ತವ್ಯ ಹೂಡಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.