ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವ ಜೊತೆಗೆ, ಈ ರೀತಿ ಸರಕು ಸಾಗಿಸುವ ಸಾರಿಗೆ ಕಂಪನಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ರಾಜ್ಯದ ತೆರಿಗೆ ಸಂಗ್ರಹ ಸ್ಥಿತಿಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಿಸಲು ಸಮಯಾವಕಾಶದ ದುರ್ಬಳಕೆ ಮತ್ತಿತರ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಳೆದ ತಿಂಗಳು ನಡೆರದ ಇಲಾಖೆಯ ಸಭೆ ಸಂದರ್ಭದಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದರು.
ಅದರಂತೆ, ರಸ್ತೆ ಜಾಗೃತಿ ತಂಡಗಳನ್ನು 77ರಿಂದ 116ಕ್ಕೆ ಹೆಚ್ಚಿಸಲಾಗಿದೆ. ಈ ತಂಡಗಳು 2.89 ಲಕ್ಷ ಸರಕು ವಾಹನಗಳು ಹಾಗೂ 7.46 ಲಕ್ಷ ಇ-ವೇ ಬಿಲ್ ಗಳನ್ನು ಪರಿಶೀಲಿಸಿದೆ. ಇದರಲ್ಲಿ ಸುಮಾರು 300 ಅಕ್ರಮಗಳು ಪತ್ತೆಯಾಗಿವೆ. ₹ 6.21 ಕೋಟಿ ತೆರಿಗೆ ಮತ್ತು ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಅಲ್ಲದೆ, ₹ 40 ಲಕ್ಷಗೂ ಹೆಚ್ಚಿನ ವ್ಯವಹಾರ ಇರುವ ವಿತರಕರ ಬಗ್ಗೆ ಸಮೀಕ್ಷೆ ನಡೆಸುವಂತೆ ಹಾಗೂ ಮಾಸಿಕ ₹ 20 ಲಕ್ಷಗಳಿಗೆ ಹೆಚ್ಚು ಬಾಡಿಗೆ ಸಂಗ್ರಹಿಸುವ ದೊಡ್ಡ ನಗರಗಳ ವಾಣಿಜ್ಯ ಸಂಕೀರ್ಣಗಳ ಸಮೀಕ್ಷೆ ನಡೆಸುವಂತೆಯೂ ನಿರ್ದೇಶನ ನಿರ್ದೇಶನ ನೀಡಿದರು.
ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ಡಿಸೆಂಬರ್ನಿಂದ ಫೆಬ್ರುವರಿ ತಿಂಗಳವರೆಗಿನ ಜಿಎಸ್ಟಿ (ಸರಕು ಸೇವಾ ತೆರಿಗೆ) ಪರಿಹಾರ ಮೊತ್ತ ₹ 4314.13 ಕೋಟಿ ಬಿಡುಗಡೆಯಾಗಿದೆ. ಅಲ್ಲದೆ, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಸಂಗ್ರಹದಲ್ಲಿ ಏರಿಕೆ ಕಂಡುಬರುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.