ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಜನಸ್ಪಂದನೆ: ಸ್ಥಳದಲ್ಲೇ ದೂರುಗಳಿಗೆ ಪರಿಹಾರ ಸೂಚಿಸಿದ ಸಿದ್ದರಾಮಯ್ಯ

Published 27 ನವೆಂಬರ್ 2023, 6:17 IST
Last Updated 27 ನವೆಂಬರ್ 2023, 6:17 IST
ಅಕ್ಷರ ಗಾತ್ರ

ಬೆಂಗಳೂರು: ಜನ ಸ್ಪಂದನಾ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧಡೆಯಿಂದ ಬಂದ ಜನರಿಂದ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

ತಮ್ಮ ಕಾವೇರಿ ನಿವಾಸದಿಂದ ಗೃಹ ಕಚೇರಿ ಕೃಷ್ಣಾಗೆ ಬಂದ ಮುಖ್ಯಮಂತ್ರಿ, ಜನರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು.

ಅಂಗವಿಕಲರ ಬಳಿ ತೆರಳಿದ ಮುಖ್ಯಮಂತ್ರಿ, ಅಹವಾಲು ಆಲಿಸಿದರು. ಬಳಿಕ ಸಂಬಂಧಿಸಿದ ಅಧಿಕಾರಿಗಳನ್ನು ಕರೆಸಿಕೊಂಡು ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. ಸಮಸ್ಯೆ ಕೇಳಿದ್ದಕ್ಕೆ ಪ್ರೀತಿಯಿಂದ ಮುಖ್ಯಮಂತ್ರಿಯ ತಲೆ ಸವರಿ ವಯೋವೃದ್ಧೆಯೊಬ್ಬರು ಆಶೀರ್ವಾದ ಮಾಡಿದರು.

ಬೀದಿಬದಿ ವ್ಯಾಪಾರಿಗಳಿಗೆ, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಆಗುತ್ತಿರುವ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಎಂಬವರು ಮುಖ್ಯಮಂತ್ರಿಗೆ ದೂರು ಸಲ್ಲಿಸಿದರು. ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ‌ ಅವರಿಗೆ ಕಿರುಕುಳ ತಪ್ಪಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.

ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಹಲವರು ದೂರು ಸಲ್ಲಿಸಿದರು. ಆಗ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿದ ಮುಖ್ಯಮಂತ್ರಿ, ತಾಂತ್ರಿಕ‌ ತೊಂದರೆ ಇದ್ದರೆ ತಕ್ಷಣ ಬಗೆಹರಿಸುವಂತೆ ಮತ್ತು ಸಿಬ್ಬಂದಿಯಿಂದ ತೊಂದರೆ ಆಗುತ್ತಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ದಂಡ ಹಾಕಿದ್ದಾರೆ. ಕಂದಾಯ ಕಟ್ಟಿದ ರಶೀದಿ ಇಟ್ಟುಕೊಂಡು ಬಿಬಿಎಂಪಿಗೆ ಹೋದರೆ, ‘ನಮಗೆ ಗೊತ್ತಿಲ್ಲ ಹೋಗಿ ಸರ್ಕಾರಕ್ಕೆ ಕೇಳಿ’ ಎಂದು ಸಿಬ್ಬಂದಿ ದರ್ಪದಿಂದ ನಡೆದುಕೊಳ್ಳುತ್ತಾರೆ ಎಂದು ವೃದ್ದೆಯೊಬ್ಬರ ದೂರಿಗೆ ಆಕ್ರೋಶಗೊಂಡ ಮುಖ್ಯಮಂತ್ರಿ, ಬಿಬಿಎಂಪಿ ಅಧಿಕಾರಿಯನ್ನು ಕರೆದು ಪ್ರಕರಣವನ್ನು ಖುದ್ದಾಗಿ ಗಮನಿಸಿ ಸಂಜೆಯೊಳಗೆ ಪರಿಹಾರ ಒದಗಿಸಿ ತಮಗೆ ವರದಿ ಕೊಡುವಂತೆ ಸೂಚಿಸಿದರು.

ನಿಂಗಮ್ಮ ಸಲ್ಲಿಸಿದ ದೂರು

ನಿಂಗಮ್ಮ ಸಲ್ಲಿಸಿದ ದೂರು

ಎಲ್ಲ ಇಲಾಖೆಗಳ ಹೆಚ್ಚುವರಿ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು, ನಿಗಮಗಳ ವ್ಯವಸ್ಥಾಪಕ ನಿರ್ದೇಶಕರುಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಉನ್ನತಮಟ್ಟದ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

ಉಚಿತ ಬಸ್‌: ಮುಖ್ಯಮಂತ್ರಿಯ ಗೃಹ ಕಚೇರಿಗೆ ಬಂದವರಿಗೆ ಮೆಜೆಸ್ಟಿಕ್‌ಗೆ ತಲುಪಲು ಉಚಿತ ಬಸ್ ಸೌಲಭ್ಯ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT