ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಆ.21ರಂದು ಶಿಕ್ಷಣ ತಜ್ಞರು ಮತ್ತು ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯನ್ನು ಸೋಮವಾರ ಕರೆದಿದ್ದಾರೆ.
ಎನ್ಇಪಿ ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ ನಂತರ ಸರ್ಕಾರ ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ. ಅದಕ್ಕಾಗಿ ಸಮಿತಿ ರಚಿಸುವ ಸಾಧ್ಯತೆ ಇದೆ. ಸಮಿತಿ ರಚನೆಯ ನಂತರ ಮಾರ್ಗಸೂಚಿ ಹೊರಡಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.
ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳು, ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಅತಿಥಿ ಉಪನ್ಯಾಸಕರ ನೇಮಕ ಮತ್ತು ಸಂಭಾವನೆ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶೈಕ್ಷಣಿಕ ಕ್ಯಾಲೆಂಡರ್ ರಚನೆ, ಕೆಲ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಚರ್ಚಿಸಲಿದ್ದಾರೆ ಎಂದೂ ಮೂಲಗಳು ಹೇಳಿವೆ.