ಶಿವಮೊಗ್ಗ: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ʼಯುವ ನಿಧಿʼ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಇಲ್ಲಿ ಚಾಲನೆ ನೀಡಲಿದ್ದಾರೆ.
'ಯುವನಿಧಿ'ಗೆ ಚಾಲನೆ ಕಾರ್ಯಕ್ರಮಕ್ಕೆ ಇಲ್ಲಿನ ವಿನೋಬ ನಗರದ ಫ್ರೀಡಂ ಪಾರ್ಕ್ (ಹಳೆಯ ಜೈಲು) ಆವರಣದಲ್ಲಿ ಬೃಹತ್ ವೇದಿಕೆ ಸಜ್ಜುಗೊಂಡಿದೆ.
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಬಂದಿರುವ ಸಾವಿರಾರು ವಿದ್ಯಾರ್ಥಿಗಳು ಫ್ರೀಡಂ ಪಾರ್ಕ್ನಲ್ಲಿ ನೆರೆದಿದ್ದಾರೆ.
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ ಸದ್ಯ 67 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅವರ ಖಾತೆಗಳಿಗೆ ಮೊದಲ ತಿಂಗಳ ನಿರುದ್ಯೋಗ ಭತ್ಯೆಯನ್ನು ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ವರ್ಗಾವಣೆ ಮಾಡಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ಸಹೊದ್ಯೋಗಿಗಳೊಂದಿಗೆ ಮಧ್ಯಾಹ್ನ 12.30ಕ್ಕೆ ವಿಮಾನದಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರಲಿದ್ದಾರೆ.
ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನೂ ಇದೇ ವೇಳೆ ಆಚರಿಸಲಾಗುತ್ತಿದೆ. ಬೃಹತ್ ವೇದಿಕೆ ಎದುರು 85 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದ ಉಸ್ತುವಾರಿ ಹೊತ್ತಿದ್ದಾರೆ. ವಿದ್ಯಾರ್ಥಿಗಳ ಕರೆತರಲು 1 ಸಾವಿರ ಬಸ್ಗಳು ಹಾಗೂ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ.