ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ತೆರಳಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಡಿ ಶಸ್ತ್ರಚಿಕಿತ್ಸೆಗಾಗಿ ಬೊಮ್ಮಾಯಿ ಅವರು ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಹೃದಯದಲ್ಲಿ ಬ್ಲಾಕೇಜ್ ಇರುವುದು ಕಂಡುಬಂದಿತ್ತು. ಬಳಿಕ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.