ಶಿವಮೊಗ್ಗ: 'ಶ್ರೀರಾಮಚಂದ್ರನ ಬಳಸಿಕೊಂಡು ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು (ಕಾಂಗ್ರೆಸ್) ವಿರೋಧಿಸುತ್ತೇವೆ.
'ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ನಾವೂ ಪೂಜೆ ಸಲ್ಲಿಸುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿರುವುದನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದ್ದಾರೆ. ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ನಾವು (ಕಾಂಗ್ರೆಸ್) ವಿರೋಧಿಸುತ್ತೇವೆ. ಹೊರತು ಶ್ರೀ ರಾಮಚಂದ್ರನನ್ನು ಅಲ್ಲ' ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ಹಾಗೆಂದು ನಾವು ದೇವರನ್ನು ಬಳಸಿ ಬಿಜೆಪಿಯವರಂತೆ ರಾಜಕೀಯ ಮಾಡುವುದಿಲ್ಲ ಎಂದರು.
ಇದೇ ವೇಳೆ ಮೂರು ಡಿಸಿಎಂ ಹುದ್ದೆಗಳ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
'ಗ್ಯಾರಂಟಿ ಯೋಜನೆಗಳು ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಕುಮಾರಸ್ವಾಮಿ ಅಂದರೆ ಸುಳ್ಳು. ಸುಳ್ಳು ಅಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ' ಎಂದರು.
'ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದು
ವಿರೋಧ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ಅವರ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳ ನೀಡಿಲ್ಲವಾದ್ದರಿಂದ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ' ಎಂದು ತಿರುಗೇಟು ನೀಡಿದರು.