ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಯುವಕರು ಮೋದಿ...ಮೋದಿ ಎಂದು ಹೇಳಿದರೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿರುವ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅವರು ಚುನಾವಣಾ ಪ್ರಚಾರ ಮಾಡುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಸಚಿವರು ಬಿಜೆಪಿ ಪರ ಇರುವ ಯುವ ಮತದಾರರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ಇದರಿಂದ ಕಾರ್ಯಕರ್ತರು ಮತ್ತು ಬೆಂಬಲಿಗರು ಹಲ್ಲೆ ಒಳಗಾಗುವ ಸಾಧ್ಯತೆ ಇದೆ’ ಎಂದು ದೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ.
ಸಚಿವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದರ ಜತೆಗೆ ಚುನಾವಣಾ ಪ್ರಚಾರದಲ್ಲಿ ತೊಡಗುವುದಕ್ಕೂ ತಡೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.