ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುತ್ತಿರುವುದರ ವಿರುದ್ಧ ನೋಟಿಸ್ ನೀಡುತ್ತಿರುವುದನ್ನು ನಿಲ್ಲಿಸಿ, ಈ ಬಗ್ಗೆ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಕಾಂಗ್ರೆಸ್ ಶಾಸಕ ಬಿ.ಝೆಡ್. ಜಮೀರ್ ಅಹಮದ್ ಖಾನ್ ಅವರು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ.
ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಮಂಗಳವಾರ ಭೇಟಿ ಮಾಡಿದ ಜಮೀರ್, ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಶಬ್ದ ಮಾಲಿನ್ಯವಾಗದಂತೆ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ. ಅಧಿಕೃತ ಪ್ರಾಧಿಕಾರದಿಂದ ಮಾನ್ಯತೆ ಪಡೆದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕ ಅಳವಡಿಸಲಾಗಿದೆ. ಹಾಗಿದ್ದರೂ ಕೆಲವು ಪೊಲೀಸ್ ಠಾಣಾ ಅಧಿಕಾರಿಗಳು ನೋಟಿ್ ಜಾರಿ ಮಾಡಿ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ. ಕಾನೂನು ಪ್ರಕಾರವೇ ನಡೆದುಕೊಳ್ಳುವವರ ವಿರುದ್ಧ ನೋಟಿಸ್ ನೀಡುವುದು ಧರ್ಮ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಕಾರಣವಾಗುವ ಸಾಧ್ಯತೆ ಇದೆ. ಈ ವಿಷಯದಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಲು ಮುಂದಾಗಬೇಕು ಹಾಗೂ ಸುತ್ತೋಲೆ ವಾಪಸ್ ಪಡೆದು ನೋಟಿಸ್ ಹಿಂಪಡೆಯಲು ಸೂಚಿಸಬೇಕು ಎಂದು ಅವರು ಕೋರಿದ್ದಾರೆ.