ಬೆಂಗಳೂರು: ‘ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಎಲ್ಲ ತೀರ್ಮಾನಗಳನ್ನು ಹೈಕಮಾಂಡ್ ಮಾಡುತ್ತದೆ. ಈ ಬಗ್ಗೆ ಬಹಿರಂಗವಾಗಿ ಚರ್ಚಿಸುವ ಅಗತ್ಯವಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಾವೆಲ್ಲರೂ ಅವರ ಜೊತೆ ಇದ್ದೇವೆ. ಬೇರೆ ಯಾವುದೇ ವಿಷಯಗಳನ್ನು ಸದ್ಯ ಚರ್ಚಿಸುವ ಅವಶ್ಯವಿಲ್ಲ’ ಎಂದರು.
‘ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕಾಗಿ ಯಾವಾಗಲೂ ಮುಂದೆ ಇರುವ ಪಕ್ಷ. ಪಕ್ಷ ಯಾವುದೇ ಕಾರ್ಯಕ್ರಮಗಳನ್ನು ಮಾಡಿದರೂ ಎಲ್ಲ ಜನರಿಗೆ ತಲುಪುವಂತೆ ಮಾಡುತ್ತೇವೆ; ಅದು ಮುಖ್ಯ. ಅದರ ಹೊರತಾಗಿ ನಮ್ಮದು ಅಲ್ಪಸಂಖ್ಯಾತರು, ರೈತರು, ಮಹಿಳೆಯರು, ಬಡವರ ಪರ ಸರ್ಕಾರ’ ಎಂದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿ, ‘ಕಳೆದ ಚುನಾವಣೆಯಲ್ಲಿ ಎಲ್ಲ ಸಮುದಾಯಗಳು ಕಾಂಗ್ರೆಸ್ ಅನ್ನು ಬೆಂಬಲಿಸಿವೆ. ಆದರೆ, ಎಷ್ಟು ಉಪ ಮುಖ್ಯಮಂತ್ರಿ ಇರಬೇಕು ಎಂಬುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ’ ಎಂದರು.