ತುಮಕೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ಕಿರುಕುಳದಿಂದ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಸಮಗ್ರವಾಗಿ ತನಿಖೆ ಮಾಡಲಾಗುವುದು. ಇದರಿಂದ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳು ಬಯಲಿಗೆ ಬರಲಿವೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ಇ.ಡಿ, ಐ.ಟಿ, ಸಿಬಿಐ ಬಳಸಿಕೊಂಡು ಎಲ್ಲೆಡೆ ದಾಳಿ ಮಾಡಿಸುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಎರಡು ವರ್ಷ ಕಳೆದಿದ್ದರೂ ಈವರೆಗೂ ಅಕ್ರಮ ನಡೆಸಿದ ಒಬ್ಬರ ಮೇಲೂ ದಾಳಿ ನಡೆಸಿಲ್ಲ’ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.
ಭ್ರಷ್ಟಾಚಾರಕ್ಕೆ ದಾಖಲೆ ಕೊಡುವಂತೆ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಳುತ್ತಾರೆ. ಮಾಡಾಳ್ ವಿರುಪಾಕ್ಷಪ್ಪ ಮನೆಯಲ್ಲಿ ಕೋಟಿ, ಕೋಟಿ ಹಣ ಸಿಕ್ಕಿದೆ. ಸಬ್ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಅಂದಿನ ಎಡಿಜಿಪಿ ಅಮೃತ್ ಪಾಲ್ ಜೈಲು ಸೇರಿದ್ದಾರೆ. ರಾಜ್ಯದೆಲ್ಲೆಡೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೆ ಎಂದು ಪಾಟೀಲ ಪ್ರಶ್ನಿಸಿದರು.