ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಗಡಿ ಜಿಲ್ಲೆಗಳಲ್ಲಿ ಏರಿಳಿತ

Last Updated 3 ಆಗಸ್ಟ್ 2021, 21:37 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 1,674 ಮಂದಿ ಕೋವಿಡ್ ಪೀಡಿತರಾಗಿರುವುದು ಮಂಗಳವಾರ ದೃಢಪಟ್ಟಿದೆ. ನೆರೆಯ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವಾರದಿಂದ ಪ್ರಕರಣಗಳ ಸಂಖ್ಯೆ ಏರಿಳಿತ ಕಾಣುತ್ತಿದೆ.

ಒಂದು ದಿನದ ಅವಧಿಯಲ್ಲಿ 1.21 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 1.38ರಷ್ಟು ವರದಿಯಾಗಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ ಹಾಗೂ 9 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಯಾದಗಿರಿ, ರಾಯಚೂರು ಹಾಗೂ ಬೀದರ್‌ನಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರಿನಲ್ಲಿ 477 ಮಂದಿ ಕೋವಿಡ್ ಪೀಡಿತರಾಗಿರುವದು ದೃಢಪಟ್ಟಿದೆ. ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 307, ಮೈಸೂರಿನಲ್ಲಿ 147 ಹಾಗೂ ಕೊಡಗಿನಲ್ಲಿ 94 ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ಹಾಗೂ ಹಾಸನದಲ್ಲಿ ತಲಾ 104 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 100ರ ಗಡಿಯೊಳಗೆ ವರದಿಯಾಗಿವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 29.09 ಲಕ್ಷ ದಾಟಿದೆ.

ಕೋವಿಡ್ ಪೀಡಿತರಲ್ಲಿ 38 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 17 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ದಕ್ಷಿಣ ಕನ್ನಡದಲ್ಲಿ 8, ಬೆಂಗಳೂರಿನಲ್ಲಿ 7, ಮೈಸೂರಿನಲ್ಲಿ 4, ತುಮಕೂರು, ಕೋಲಾರ, ಧಾರವಾಡ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಇಬ್ಬರು ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 2.27ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್‌ನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 36,650ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರಲ್ಲಿ 1,376 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 28.49 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಕಂಡಿದ್ದು, ಸದ್ಯ 24,280 ಮಂದಿ ಆಸ್ಪತ್ರೆ
ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT