ಬೆಂಗಳೂರು: ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು (ಸಿಎಸ್ಆರ್) ಬಳಸಿಕೊಂಡು ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲೂ ಮೂರು ನೂತನ ಶಾಲೆಗಳ ನಿರ್ಮಾಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯಲ್ಲಿ ಬುಧವಾರ ಆಯೋಜಿಸಿದ್ದ ಸಭೆಯ ನಂತರ ಅವರು ಮಾತನಾಡಿದರು.
‘ಸಿಎಸ್ಆರ್ ನಿಧಿಯನ್ನು ಸದ್ಬಳಕೆ ಮಾಡಲು ಸರ್ಕಾರ ಸೂಕ್ತ ಯೋಜನೆ ರೂಪಿಸುತ್ತಿದೆ. ಇದುವರೆಗೂ ಹಣ ನಗರ ಪ್ರದೇಶಗಳಿಗೆ ಬಳಕೆಯಾಗುತ್ತಿತ್ತು. ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಬಳಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಪಂಚಾಯಿತಿಯಲ್ಲಿ ಮೂರು ಶಾಲೆಗಳನ್ನು ಹೊಸದಾಗಿ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಕನಸಾಗಿದೆ. ನಾನೂ ಸಹ ಪಂಚಾಯಿತಿ ವ್ಯಾಪ್ತಿಯ ಮೂರು ಶಾಲೆಗಳನ್ನು ದತ್ತು ತೆಗೆದುಕೊಳ್ಳುವೆ’ ಎಂದರು.
ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು. ಅವರ ಶಾಲೆಯ ಶಿಕ್ಷಕರನ್ನೇ ಗ್ರಾಮೀಣ ಭಾಗದ ಶಾಲೆಗಳಿಗೆ ಕಳುಹಿಸಬೇಕು. ಅಂತರರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನಮ್ಮ ಕರ್ನಾಟಕದ ಪ್ರತಿ ಗ್ರಾಮೀಣ ಮಕ್ಕಳಿಗೂ ದೊರೆಯಬೇಕು. ಇಂತಹ ಆಶಯಗಳಿಗಾಗಿಯೇ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಸಂಸದ ಡಿ.ಕೆ. ಸುರೇಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತೆ ಬಿ.ಬಿ. ಕಾವೇರಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.