ಬೆಂಗಳೂರು: ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅಥವಾ ಅವರ ಕುಟುಂಬದ ಸದಸ್ಯರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲು ಅವರದೇ ಪಕ್ಷದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ಷೇಪ ಎತ್ತಿದ್ದಾರೆ.
ವಿರೋಧ ಲೆಕ್ಕಿಸದೇ ಒಂದು ವೇಳೆ ಟಿಕೆಟ್ ನೀಡಿದರೆ ಬಂಡಾಯ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದೇಶ್ವರ ಅವರಿಗೆ ಬಿಜೆಪಿ ಟಿಕೆಟ್ ನೀಡಲು ಕ್ಷೇತ್ರದ ಕಾರ್ಯಕರ್ತರು, ಮುಖಂಡರ ವಿರೋಧವಿದೆ. ಅವರಿಗೆ ಟಿಕೆಟ್ ನೀಡಿದರೆ ಬಂಡಾಯ ಎದುರಿಸಬೇಕಾಗುತ್ತದೆ. ಜಿಲ್ಲೆಯ ಜನರ ಅಪೇಕ್ಷೆಯಂತೆ ನನಗೆ ಇಲ್ಲವೇ, ಜಗಳೂರು ಮಾಜಿ ಶಾಸಕ ಗುರುಸಿದ್ದನಗೌಡ ಅವರ ಪುತ್ರ ಡಾ.ರವಿಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
‘ಸಿದ್ದೇಶ್ವರ ಅವರ ತಂದೆ ಮಲ್ಲಿಕಾರ್ಜುನಪ್ಪ ಸಜ್ಜನ ರಾಜಕಾರಣಿ, ಅಜಾತಶತ್ರು. ಎರಡು ಬಾರಿ ಸಂಸದರಾಗಿದ್ದರು. ನಾಲ್ಕು ಬಾರಿ ಆಯ್ಕೆಯಾಗಿರುವ ಈಗಿನ ಸಂಸದರಿಗೆ ಅಹಂಕಾರ ನೆತ್ತಿಗೇರಿದೆ. ಕಾಂಗ್ರೆಸ್ನ ಶಾಮನೂರು ಕುಟುಂಬದ ಮುಂದೆ ಸ್ಪರ್ಧಿಸುವ ಗಂಡಸರು ಬಿಜೆಪಿಯಲ್ಲಿ ಯಾರಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಪಕ್ಷವನ್ನೇ ಗೌಣ ಮಾಡಿದ್ದಾರೆ’ ಎಂದು ದೂರಿದರು.