ಬೆಳಗಾವಿ: ‘ಸುವರ್ಣ ವಿಧಾನಸೌಧದ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಮಹಾರಾಷ್ಟ್ರ ಏಕೀಕರಣ ಸಮಿತಿಯವರ ಕೂಗು ಕ್ಷೀಣಿಸಿದೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
‘2005ರಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಈಗ ಬೆಳಗಾವಿ ಬಹಳಷ್ಟು ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ಎಂಇಎಸ್ ತನ್ನ ನೆಲೆ ಕಳೆದುಕೊಂಡಿದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
‘ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ. ಹಿಂದಿನ ಅಧಿವೇಶನದಲ್ಲಿ ಉತ್ತರದ ಸಮಸ್ಯೆಗಳ ಕುರಿತ ಚರ್ಚೆ ಕೈಗೆತ್ತಿಕೊಂಡಾಗ, ದಕ್ಷಿಣ ಕರ್ನಾಟಕದ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಮಾತನಾಡಿದ್ದರು. ಈ ಭಾಗದವರೇ ಹೆಚ್ಚಾಗಿ ಮಾತನಾಡಲಿಲ್ಲ. ಈ ಬಾರಿ ಅಧಿವೇಶನ ಆರಂಭವಾಗುವ ಮೊದಲ ವಾರದಲ್ಲಿ ಮಂಗಳವಾರ ಮತ್ತು ಬುಧವಾರ, ಪರಿಷತ್ನಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಮಯ ಮೀಸಲಿಡುತ್ತೇವೆ’ ಎಂದರು.