ಒಂದರಿಂದ ಐದನೇ ತರಗತಿಯವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡುವುದನ್ನು ಕಡ್ಡಾಯಗೊಳಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಕಾರ್ಪೊರೇಟ್ ಕಂಪನಿಗಳು ಸಾಮಾಜಿಕ ಕಾರ್ಯಗಳಿಗೆ ಮೀಸಲಿಡುವ ನಿಧಿ ಬಳಸಿಕೊಂಡು ಸರ್ಕಾರಿ ಶಾಲಾ ಜಾಗದಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ನಡೆಸುವುದು ಸಮಂಜಸವಲ್ಲ. ಇಂತಹ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸುವ ಅಧಿಕಾರವೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ. ಇಂತಹ ನಿರ್ಧಾರಗಳಿಂದ ಸರ್ಕಾರ ಹಿಂದೆ ಸರಿಯಬೇಕು. ಕನಿಷ್ಠ ಐದನೇ ತರಗತಿಯವರೆಗೆ ಮಾತೃಭಾಷಾ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು ಎಂದು ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ, ಜಿ. ರಾಮಕೃಷ್ಣ, ಅಶ್ವತ್ಥನಾರಾಯಣ, ರಾ.ನಂ. ಚಂದ್ರಶೇಖರ, ಸುದರ್ಶನ, ಸಾಹಿತಿ ವಸುಂಧರಾ ಭೂಪತಿ, ನಿರ್ದೇಶಕ ಟಿ.ಎಸ್. ನಾಗಾಭರಣ, ಪತ್ರಕರ್ತ ಬಿ.ಎಂ. ಹನೀಫ್, ನಿವೃತ್ತ ಅಧಿಕಾರಿ ವಿಶುಕುಮಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.