ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಮಳೆ: ಏರುಗತಿ ಪಡೆದ ಡೆಂಗಿ- ತಿಂಗಳಲ್ಲಿ 500ಕ್ಕೂ ಅಧಿಕ ಪ್ರಕರಣಗಳು ಪತ್ತೆ

Last Updated 24 ಜುಲೈ 2021, 16:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ನಿಯಂತ್ರಣದಲ್ಲಿದ್ದ ಡೆಂಗಿ ‍ಪ್ರಕರಣಗಳು ಈ ವರ್ಷ ಮುಂಗಾರು ಮಳೆ ಕಾಣಿಸಿಕೊಂಡ ಬೆನ್ನಲ್ಲೇ ಏರುಗತಿ ಪಡೆದಿದೆ. ಈ ತಿಂಗಳಲ್ಲಿ 500ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ.

ಈ ವರ್ಷದ ಮೊದಲ ಆರು ತಿಂಗಳ ಅವಧಿಯಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಸಾವಿರದ ಗಡಿಯ ಆಸುಪಾಸಿನಲ್ಲಿತ್ತು. ಮುಂಗಾರು ಮಳೆ ಚುರುಕುಗೊಂಡ ಬಳಿಕ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯ ಹಾದಿ ಹಿಡಿದಿದೆ. ಈವರೆಗೆ ಒಟ್ಟು 1,502 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಗ್ರಾಮಾಂತರ ಬಿಟ್ಟು ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ಹಾಗೂ ಬೆಂಗಳೂರಿನಲ್ಲಿ ತಲಾ 255, ಶಿವಮೊಗ್ಗದಲ್ಲಿ 158, ದಕ್ಷಿಣ ಕನ್ನಡದಲ್ಲಿ 147, ಕಲಬುರ್ಗಿಯಲ್ಲಿ 81, ಬಳ್ಳಾರಿ ಮತ್ತು ಗದಗದಲ್ಲಿ ತಲಾ 76, ದಾವಣಗೆರೆಯಲ್ಲಿ 63, ಕೊಪ್ಪಳದಲ್ಲಿ 61, ವಿಜಯಪುರದಲ್ಲಿ 50 ಡೆಂಗಿ ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 50ರ ಗಡಿಯೊಳಗೆ ಇವೆ.

ಸೋಂಕಿತ ಈಡಿಸ್ ಈಜಿಫ್ಟೈ ಸೊಳ್ಳೆಗಳ ಕಡಿತದಿಂದ ಹರಡುವ ಈ ಜ್ವರಕ್ಕೆ 2019ರಲ್ಲಿ 18 ಸಾವಿರಕ್ಕೂ ಅಧಿಕ ಮಂದಿ ಬಳಲಿದ್ದರು. ಅವರಲ್ಲಿ 17 ಮಂದಿ ಮೃತಪಟ್ಟಿದ್ದರು. 10 ಸಾವಿರಕ್ಕೂ ಅಧಿಕ ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿದ್ದವು. ದಶಕದಲ್ಲೇ ಅತಿ ಹೆಚ್ಚು ಮಂದಿ ಈ ಜ್ವರಕ್ಕೆ ಒಳಪಟ್ಟಿದ್ದರು. ಕೋವಿಡ್‌ ಕಾಣಿಸಿಕೊಂಡ ಬಳಿಕ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳಿಂದ ಈ ಜ್ವರಕ್ಕೆ ಒಳಪಡುವವರ ಸಂಖ್ಯೆ ಇಳಿಕೆ ಕಂಡಿತ್ತು. ಕಳೆದ ವರ್ಷ 3,823 ಮಂದಿಯಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿತ್ತು. ಅವರಲ್ಲಿ 5 ಮಂದಿ ಮೃತಪಟ್ಟಿದ್ದರು.

ಎಚ್ಚರಿಕೆ ಅಗತ್ಯ: ರಾಜ್ಯದಲ್ಲಿ ಈವರೆಗೆ 508 ಚಿಕೂನ್‌ಗುನ್ಯಾ ಪ್ರಕರಣಗಳು ದೃಢಪಟ್ಟಿವೆ. 24 ಜಿಲ್ಲೆಗಳಲ್ಲಿ ಪ್ರಕರಣಗಳು ವರದಿಯಾಗಿದ್ದು, ಕೋಲಾರದಲ್ಲಿ ಗರಿಷ್ಠ (55) ಪ್ರಕರಣಗಳು ವರದಿಯಾಗಿವೆ. ಡೆಂಗಿ ಹಾಗೂ ಚಿಕೂನ್‌ಗುನ್ಯಾ ಜ್ವರಕ್ಕೆ ಈ ವರ್ಷ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ.

‘ಮುಂಗಾರು ಮಳೆಯ ಅವಧಿಯಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆ, ಸಂಗ್ರಹಿಸಿಟ್ಟ ನೀರಿನಲ್ಲಿ ಮೊಟ್ಟೆಯಿಟ್ಟು, ಸಂತಾನೋತ್ಪತ್ತಿ ಮಾಡುತ್ತದೆ. ಹಾಗಾಗಿ, ಮನೆಯ ಸುತ್ತಮುತ್ತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಡೆಂಗಿ ಜ್ವರಕ್ಕೆ ಈ ವರ್ಷ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ’ ಎಂದು ಹೆಸರು ಬಹಿರಂಗ‍ಪಡಿಸಲು ಇಚ್ಛಿಸದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ರೋಗ ಲಕ್ಷಣ ಆಧರಿಸಿ ಚಿಕಿತ್ಸೆ

‘ಡೆಂಗಿ ಜ್ವರಕ್ಕೆ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ ಹಾಗೂ ಆಂತರಿಕ ರಕ್ತಸ್ರಾವ ಪ್ರಮುಖ ಲಕ್ಷಣವಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದಲ್ಲಿ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ಮನೆಯ ಸುತ್ತಮುತ್ತ ಬಿಸಾಡಿದ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT