ಮುಧೋಳ: ರಾಜ್ಯದಲ್ಲಿ ಮುಂದಿನ ವರ್ಷ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ತಾಲ್ಲೂಕಿನ ಯಡಹಳ್ಳಿಯ ಶಿವಲಿಂಗಪ್ಪ ಬಸಪ್ಪ ಹೊರಟ್ಟಿ ಪಬ್ಲಿಕ್ ಶಾಲೆಗೆ ಮಂಗಳವಾರ ಭೇಟಿ ನೀಡಿ, ಸನ್ಮಾನ ಸ್ಮೀಕರಿಸಿ ಮಾತನಾಡಿದ ಅವರು, ಮಕ್ಕಳ ಕಲಿಕೆಯೇ ದೇಶದ ಆಸ್ತಿ. ಮೊದಲ ಹಂತದಲ್ಲಿ ಇಷ್ಟು ಶಾಲೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ರಾಜ್ಯಕ್ಕೆ ಮಾದರಿಯಾಗಿರುವ ಯಡಹಳ್ಳಿಯ ಹೊರಟ್ಟಿ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ್ದೇನೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿಯಿಂದ ಹಿಡಿದು ಪಿಯುಸಿವರೆಗೆ ಸ್ಮಾರ್ಟ್ ಕ್ಲಾಸ್ನಿಂದ ಹಿಡಿದು ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತಿದೆ. ಖಾಸಗಿ ಶಾಲೆ ಮೀರಿಸುವ ರೀತಿಯಲ್ಲಿ ಅಭಿವೃದ್ದಿ ಮಾಡಲಾಗುವುದು. ಸುಸಜ್ಜಿತ ಪ್ರಯೋಗಾಲಯ, ಆಟವಾಡಲು ಮೈದಾನ ಸೇರಿದಂತೆ ಕಲಿಕೆಗೆ ಬೇಕಾಗುವ ಸೌಲಭ್ಯಗಳ ಒದಗಿಸಲಾಗುಗುವುದು ಎಂದು ಹೇಳಿದರು.
ಮುಂದಿನ ಮೂರು ವರ್ಷಗಳ ನಂತರ ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ 3 ಸಾವಿರ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ. ಆ ನಿಟ್ಟಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿಯವರ ಮಾರ್ಗದರ್ಶಮ ನಮಗೆ ಅಗತ್ಯವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ ಮಾತನಾಡಿ, ಹೊರಟ್ಟಿಯವರು ತಾವು ಜನ್ಮ ತೆಳೆದ ಗ್ರಾಮದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಶಿಕ್ಷಣ ಸಂಸ್ಥೆ ಕಟ್ಟಿದ್ದಾರೆ. ಶಿಕ್ಷಣ ನೀಡುವ ಮೂಲಕ ಮಕ್ಕಳ ಯುಕ್ತಿ ಹೊರತರುವ ಕೆಲಸ ಆಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ ಮಾತನಾಡಿ, ಯಡಹಳ್ಳಿಯಲ್ಲಿ ಸರಕಾರಿ ಶಾಲೆ ಈ ರೀತಿ ಇರುವುದು ಹೆಮ್ಮೆಯ ವಿಷಯ. ಮಕ್ಕಳ ಓದಿನ ಜೊತೆಗೆ ಸಂಸ್ಕಾರವು ಮುಖ್ಯವಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ನರ್ಸರಿಯಿಂದ ಪದವಿವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಶಾಲೆ ಅಭಿವೃದ್ಧಿ ಪಡಿಸಲಾಗಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ನಿಲಯ, ಹೈಟೆಕ್ ಶೌಚಾಲಯ ನಿರ್ಮಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಡಿಡಿಪಿಐ ಬಿ.ಕೆ.ನಂದನೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ತಹಶೀಲ್ದಾರ್ ವಿನೋದ ಹುತ್ತಳ್ಳಿ, ಪಬ್ಲಿಕ್ ಶಾಲೆಯ ಪ್ರಾಚಾರ್ಯ ವಿ.ಪಿ.ಪೆಟ್ಲೂರ ಉಪಸ್ಥಿತರಿದ್ದರು.
ಯಡಹಳ್ಳಿ ಮಾದರಿ ಶಾಲೆಗೆ ವೈಯಕ್ತಿಕವಾಗಿ ₹5 ಲಕ್ಷ ನೀಡುತ್ತೇನೆ. ಎಲ್ಲ ರೀತಿಯ ಸಹಕಾರ ನೀಡಲಾಗುವುದು ಮಧು ಬಂಗಾರಪ್ಪ ಸಚಿವ