ಬೆಂಗಳೂರು: ‘ನಾನು ಮೋದಿಗೆ ಅವಾಚ್ಯ ಪದಗಳನ್ನು ಬಳಸಿಲ್ಲ. ಬಿಜೆಪಿಯವರು ನುಡಿದಂತೆ ನಡೆದಿದ್ದರೆ ಮೋದಿಗೆ ನಾನೂ ಜೈ ಹೇಳುತ್ತೇನೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಕಾರಟಗಿಯ ಕಾರ್ಯಕ್ರಮದಲ್ಲಿ ನಾನು ಸಂವಿಧಾನ ಬದಲಾವಣೆ ಹೇಳಿಕೆ ವಿರುದ್ದ ಮಾತನಾಡಿದ್ದೇನೆ. ಬಿಜೆಪಿಯವರ, ಸಿ.ಟಿ. ರವಿ ಅವರ ಕಪಾಳಕ್ಕೆ ಹೊಡೆಯಿರಿ ಎಂದು ನಾನು ಹೇಳಿದ್ದೇನೆಯೇ’ ಎಂದು ಪ್ರಶ್ನಿಸಿದರು.
‘ನಮ್ಮ ಮಕ್ಕಳ ದಾರಿ ತಪ್ಪಿಸುವವರ ವಿರುದ್ದ ಮಾತನಾಡಿದೆ. ಚಿಕ್ಕಪ್ಪ, ಅಣ್ಣ, ಹಿತಚಿಂತಕನಾಗಿ ಉತ್ತರ ಕರ್ನಾಟಕ ಭಾಷೆಯಲ್ಲಿ ಮಾತನಾಡಿದ್ದು ತಪ್ಪೇ? ಸಿ.ಟಿ. ರವಿ ಅವರು ಅಪ್ಪನಿಗೆ ಹುಟ್ಟಿದ್ದರೇ ಎನ್ನುವ ಮಾತನ್ನು ಆಡಿದ್ದಾರೆ. ನಾನು ಸಹ ಯಾರಿಗೆ ಹುಟ್ಟಿದ್ದೀರಿ ಎಂದು ಕೇಳಬಹುದಿತ್ತು. ಆದರೆ, ಅವರಷ್ಟು ಕೆಳಮಟ್ಟಕ್ಕೆ ಇಳಿಯಲು ಇಷ್ಟಪಡುವುದಿಲ್ಲ’ ಎಂದರು.
‘ನಾವು ಯಾರಿಗೆ ಹುಟ್ಟಿದ್ದೇವೆ ಎಂದು ನಮ್ಮ ತಾಯಂದಿರಿಗೆ ಗೊತ್ತಿರುತ್ತದೆ. ನೀವು ಸವಾಲಿಗೆ ಸಿದ್ಧರಿದ್ದರೆ ನನ್ನ ತಾಯಿಯನ್ನು ಬಿಜೆಪಿ ಕಚೇರಿಗೆ ಕರೆದುಕೊಂಡು ಬರುತ್ತೇನೆ. ನೀವು ತಯಾರಿದ್ದೀರಾ? ಎರಡು ಕೋಟಿ ಉದ್ಯೋಗ, ನರೇಗಾ ಅನ್ಯಾಯದ ಬಗ್ಗೆ ಉತ್ತರ ಕೊಡಲು ಸಿದ್ಧರಿದ್ದೀರಾ’ ಎಂದೂ ಸಿ.ಟಿ. ರವಿ ಅವರನ್ನು ತಂಗಡಗಿ ಪ್ರಶ್ನಿಸಿದರು.
‘ಬಿಜೆಪಿಯವರು ಸುಳ್ಳು, ಕಪಟ, ಮೋಸ ಮಾಡುವುದರ ಜೊತೆಗೆ ನಮ್ಮ ಯುವಕರ, ಮಕ್ಕಳ ಹಾದಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮಾಧ್ಯಮದವರು ನನ್ನ ಭಾಷಣದ ಪೂರ್ಣ ಪಾಠವನ್ನು ಹಾಕಿ, ತುಣುಕು ಮಾತ್ರ ಏಕೆ ಹಾಕಿದ್ದೀರಿ’ ಎಂದೂ ಅವರು ಕೇಳಿದರು.