ಬೆಳಗಾವಿ: ‘ಕಂದಾಯ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಹಾಗೂ ಸುಳ್ಳು ದಾಖಲೆ ಸೃಷ್ಟಿಸುವುದನ್ನು ತಡೆಯಲು ‘ಭೂಸುರಕ್ಷಾ’ ಯೋಜನೆಯನ್ನು ಒಂದು ವಾರದೊಳಗೆ ರಾಜ್ಯದಾದ್ಯಂತ ಆರಂಭಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಂದಾಯ ಇಲಾಖೆಯಲ್ಲಿನ ಹಳೆಯ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆ ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಆ ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಿಸುವುದು ಮತ್ತು ನಕಲಿ ಸೃಷ್ಟಿಗೆ ತಡೆಯೊಡ್ಡುವ ಸಲುವಾಗಿ 31 ಜಿಲ್ಲೆಗಳ ತಲಾ ಒಂದು ತಾಲ್ಲೂಕಿನಲ್ಲಿ ಪ್ರಥಮ ಹಂತವಾಗಿ ಯೋಜನೆಗೆ ಚಾಲನೆ ಕೊಡಲಾಗುತ್ತಿದೆ. ಎಲ್ಲ ದಾಖಲೆಗಳನ್ನು 100 ದಿನಗಳಲ್ಲಿ ಡಿಜಿಟಲೀಕರಣ ಮಾಡಲಾಗುವುದು’ ಎಂದರು.
‘ಭೂಮಾಪನ ಇಲಾಖೆಯಲ್ಲಿನ ಕೆಲಸಗಳಿಗೆ ವೇಗ ನೀಡಲು ಫೆಬ್ರುವರಿಯಲ್ಲಿ 750 ಪರವಾನಗಿ ಭೂಮಾಪಕರನ್ನು (ಲೈಸೆನ್ಸ್ ಸರ್ವೇಯರ್ಸ್) ತಾಲ್ಲೂಕು ಕೇಂದ್ರಗಳಲ್ಲಿ ನಿಯೋಜಿಸಲಾಗುವುದು. 357 ಸರ್ಕಾರಿ ಸರ್ವೇಯರ್ಗಳು ಮತ್ತು ಸಹಾಯಕ ನಿರ್ದೇಶಕರ ನೇಮಕಾತಿಗೆ ಅನುಮೋದನೆ ಸಿಕ್ಕಿದ್ದು, ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುವುದು. ಖಾಲಿ ಇರುವ 592 ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲಾಗುವುದು’ ಎಂದು ತಿಳಿಸಿದರು.