ಬೆಂಗಳೂರು: ‘ಪರಸ್ಪರ ಸಮ್ಮತಿಯ ಮೇರೆಗೆ ವಿಚ್ಛೇದನ ಪಡೆಯಲು ಬಯಸುವ ಪತಿ-ಪತ್ನಿ ಒಂದೇ ಮನೆಯಲ್ಲಿ ನೆಲೆಸಿದ್ದಾರೆ ಎಂದ ಮಾತ್ರಕ್ಕೆ ಅವರ ವಿಚ್ಛೇದನಕ್ಕೆ ಅನುಮತಿ ನಿರಾಕರಿಸಲಾಗದು‘ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪ್ರಕರಣವೊಂದರಲ್ಲಿ ದಂಪತಿಗೆ ವಿಚ್ಛೇದನ ನಿರಾಕರಿಸಿ ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.
ಈ ಸಂಬಂಧ ಬೆಂಗಳೂರಿನ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
’ಸಾಮಾನ್ಯವಾಗಿ ದಂಪತಿಯ ನಡುವೆ ವೈಮನಸ್ಸು ಉಂಟಾದಾಗ ಪರಸ್ಪರ ವಾದ ಅಥವಾ ಜಗಳ ಆಡುವುದು ಸಾಮಾನ್ಯ. ಈ ಪ್ರಕರಣದಲ್ಲಿ ದಂಪತಿ ವಿಚ್ಛೇದನ ಬಯಸಿದ್ದರೂ ಒಂದೇ ಮನೆಯಲ್ಲಿ ನೆಲೆಸಿರುವುದು ಅವರ ಸುಸಂಸ್ಕೃತಿಯನ್ನು ತೋರಿಸುತ್ತದೆ‘ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಪ್ರಕರಣವನ್ನು ಪುನಃ ಕೌಟುಂಬಿಕ ನ್ಯಾಯಾಲಯಕ್ಕೆ ಹಿಂದಿರುಗಿಸಿದೆ.
‘ಹೊಸದಾಗಿ ವಿಚಾರಣೆ ನಡೆಸಿ ರಾಜಿ ಅರ್ಜಿಯ ನಿಯಮಗಳಿಗೆ ಅನುಗುಣವಾಗಿ ಮಧ್ಯಸ್ಥಿಕೆದಾರರ ಸಮಕ್ಷಮದಲ್ಲಿ ಶೀಘ್ರವೇ ಸೂಕ್ತ ಆದೇಶ ಹೊರಡಿಸಿ‘ ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ. ಅಂತೆಯೇ ಇದೇ 23ರಂದು ದಂಪತಿ ಕೌಟುಂಬಿಕ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನಿರ್ದೇಶಿಸಿದೆ.
ಪರಸ್ಪರ ಒಪ್ಪಿಗೆಯ ವಿಚ್ಛೇದನ ಕೋರಿ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ 2022ರ ಅಕ್ಟೋಬರ್ 15ರಂದು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.