ಬೆಂಗಳೂರು: ‘ಶಾಸಕ ಜಮೀರ್ ಅಹಮ್ಮದ್ ವಿರುದ್ಧ ಕ್ರಮ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಕುರಿತು ಇರುವ ಭಯವೇ ಕಾರಣ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
‘ಬಿಜೆಪಿ ನಾಯಕತ್ವದ ಬಗ್ಗೆ ಮಾತನಾಡುವ ಶಿವಕುಮಾರ್ ಅವರು ಕಾಂಗ್ರೆಸ್ ನಾಯಕತ್ವ ಜಗ್ಗಾಟದ ಬಗ್ಗೆ ಮೌನವಾಗಿದ್ದಾರೆ’ ಎಂದು ಹೇಳಿದೆ.
‘ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್ನಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಆದ್ಯತೆ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಅವರನ್ನು ತಲೆ ಮೇಲೆ ಹೊತ್ತು ತಿರುಗುತ್ತಿರುವ ಜಮೀರ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಧೈರ್ಯ ತೋರುತ್ತಿಲ್ಲ’ ಎಂದು ಲೇವಡಿ ಮಾಡಿದೆ.
‘ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರೇ ಸುಪ್ರೀಂ ಎಂದು ಪರಮೇಶ್ವರ ಹೇಳಿದ್ದಾರೆ. ಆದರೂ ಕ್ರಮ ತೆಗೆದುಕೊಳ್ಳಲು ನಿಮಗೆ ಏಕೆ ಧೈರ್ಯವಿಲ್ಲ? ಜಮೀರ್ ವಿರುದ್ಧ ಕ್ರಮ ತೆಗೆದುಕೊಂಡರೆ ವಲಸೆ ನಾಯಕ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾಗುವ ಭಯ ನಿಮ್ಮನ್ನು ಕಾಡುತ್ತಿದೆಯೇ’ ಎಂದು ಬಿಜೆಪಿ ಪ್ರಶ್ನಿಸಿದೆ.
‘ಮುಂದಿನ ಮುಖ್ಯಮಂತ್ರಿ ಸ್ಥಾನದ ವಿಚಾರವನ್ನು ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ಮುನ್ನೆಲೆಗೆ ಬಿಟ್ಟಿದ್ದಾರೆ. ಆದರೆ, ದುರ್ಬಲ ಅಧ್ಯಕ್ಷರಿಗೆ ಏನೂ ಮಾಡಲಾಗುತ್ತಿಲ್ಲ’ ಎಂದು ಬಿಜೆಪಿ ಹಂಗಿಸಿದೆ.