ಬೆಂಗಳೂರು: ರಾಜ್ಯ ಕಾಂಗ್ರೆಸ್ನ ಸದ್ಯದ ಬೆಳವಣಿಗೆಗಳು ಹಾಗೂ ಪಕ್ಷದ ಕಾರ್ಯಕ್ರಮಗಳ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಅವರು ಇದೇ ಮೊದಲ ಬಾರಿಗೆ ದೆಹಲಿಗೆ ಹೋಗಿದ್ದಾರೆ. ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಲಾಕ್ಡೌನ್ ಜಾರಿಗೊಂಡ ಕಾರಣ ಹೈಕಮಾಂಡ್ ಜೊತೆಗೆ ಶಿವಕುಮಾರ್ ಅವರ ಮುಖಾಮುಖಿ ಸಾಧ್ಯವಾಗಿರಲಿಲ್ಲ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗೆ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ್ದ ಶಿವಕುಮಾರ್, ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷ ಮಾಡುತ್ತಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಿದ್ದರು.
ಪಕ್ಷದ ಸಂಘಟನೆ ಹಾಗೂ ಆಂತರಿಕ ಬೆಳವಣಿಗೆಗಳ ಕುರಿತು ಕೂಡಾ ಹೈಕಮಾಂಡ್ಗೆ ಶಿವಕುಮಾರ್ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರ ಜೊತೆಗೆ ಸಹೋದರ, ಸಂಸದ ಡಿ.ಕೆ. ಸುರೇಶ್ ಕೂಡಾ ತೆರಳಿದ್ದಾರೆ.