ನವದೆಹಲಿ: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿಯೂ, ಡಿ.ಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಿಂದ ಬೇಸರವಾಗಿದೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಅವರು ಮಾತನಾಡಿದರು.
‘ನಾನು ಸಂಪೂರ್ಣವಾಗಿ ಸಂತುಷ್ಟನಾಗಿಲ್ಲ. ಆದರೆ ಕರ್ನಾಟಕದ ಜನರ ಹಿತಾಸಕ್ತಿಗಾಗಿ, ನಾವು ನಮ್ಮ ಬದ್ಧತೆಯನ್ನು ಪೂರೈಸುವುದಕ್ಕಾಗಿ, ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ. ಭವಿಷ್ಯದಲ್ಲಿ ನೋಡೋಣ. ಹಾದಿ ಇನ್ನೂ ದೀರ್ಘವಾಗಿದೆ‘ ಎಂದು ಹೇಳಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ನಾನು ಬಯಸಿದ್ದೆ. ಆದರೆ ಅದು ಆಗಲಿಲ್ಲ. ಕಾದು ನೋಡೋಣ‘ ಎಂದು ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಮೇ 20 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಅಂದು ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.