ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಿರ್ಧಾರ ವಾಪಸು ಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ 2024ರ ಜನವರಿ 5ಕ್ಕೆ ಮುಂದೂಡಿದೆ.
ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಅರ್ಜಿಗೆ ಸಂಬಂಧಿಸಿದಂತೆ ಉತ್ತರಿಸಲು ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಪ್ರಕರಣವೇನು?:
ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿ 2019ರ ಸೆಪ್ಟೆಂಬರ್ 25ರಂದು ಹೊರಡಿಸಿದ್ದ ಆದೇಶವನ್ನು ಸಿದ್ದರಾಮಯ್ಯ ಸರ್ಕಾರ 2023ರ ನವೆಂಬರ್ 23 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಾಪಸು ಪಡೆದಿತ್ತು.
‘ಅನುಮತಿ ಹಿಂಪಡೆದಿರುವ ಸಂಪುಟದ ನಿರ್ಧಾರ ಕಾನೂನಿಗೆ ವಿರುದ್ಧವಾಗಿದೆ. ಆರೋಪಿಯು ಇದೇ ಸಚಿವ ಸಂಪುಟದ ಸದಸ್ಯರಾಗಿದ್ದಾರೆ. ಇದೊಂದು ಕಳಂಕಿತ ನಿರ್ಧಾರ. ಇದಕ್ಕೆ ತಡೆ ನೀಡಬೇಕು‘ ಎಂಬುದು ಅರ್ಜಿದಾರರ ಕೋರಿಕೆ.