ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಬಜೆಟ್ನಲ್ಲಿ ಮೀಸಲಿಟ್ಟಿರುವ ₹ 510 ಕೋಟಿ ಸಾಲದು, ಹೆಚ್ಚಿನ ಅನುದಾನ ಒದಗಿಸಬೇಕು ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಮಾಜಿ ಸಲಹೆಗಾರ ಎಂ.ಆರ್.ದೊರೆಸ್ವಾಮಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ರಾಜ್ಯದ 30 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆ ಇದೆ. ದುರಸ್ತಿ ಹಾಗೂ ನಿರ್ವಹಣೆಗಾಗಿ ಬಜೆಟ್ನಲ್ಲಿ ಪ್ರತ್ಯೇಕವಾಗಿ ₹ 13 ಸಾವಿರ ಕೋಟಿ ಮೀಸಲಿಡಲು ಕೋರಿ ಹಿಂದೆ ಪತ್ರ ಬರೆಯಲಾಗಿತ್ತು. ಹೈಕೋರ್ಟ್ ಸಹ ಸರ್ಕಾರಿ ಶಾಲೆಗಳ ಸ್ಥಿತಿ ಅಘಾತಕಾರಿಯಾಗಿದೆ ಎಂದಿದೆ. ಸಿದ್ದರಾಮಯ್ಯನವರ ಸಾಮಾಜಿಕ ಕಳಕಳಿ ಗ್ರಾಮೀಣ ಭಾಗದ ಶಾಲಾ ವಿದ್ಯಾರ್ಥಿಗಳಿಗೆ ವರವಾಗಬೇಕು. ಪುನಶ್ಚೇತನಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಬಜೆಟ್ ಹೊರತಾಗಿಯೂ ಅನುದಾನ ಒದಗಿಸಬೇಕು ಎಂದು ಕೋರಿದ್ದಾರೆ.