ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆದರೆ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ತಿಳಿಸಿದರು.
ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಹಲವು ಸಂಘ, ಸಂಸ್ಥೆಗಳು ಹಾಗೂ ದೇವಸ್ಥಾನಗಳ ಆಡಳಿತ ಮಂಡಳಿಗಳಿಂದಲೂ ಪ್ರಸ್ತಾವ ಬಂದಿದೆ. ಇದೇ20 ಹಾಗೂ 21ರಂದು ಧಾರ್ಮಿಕ ಪರಿಷತ್ ಸಭೆ ನಡೆಯಲಿದ್ದು, ಅಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು’ ಎಂದು ಹೇಳಿದರು.
ಶಿಷ್ಟಾಚಾರ, ಕೆಲ ಸಂಪ್ರದಾಯಗಳನ್ನು ಪಾಲಿಸುವ ಉದ್ದೇಶದಿಂದ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಸಾಕಷ್ಟು ಕಡೆಗಳಿಂದ ಒತ್ತಡಗಳು ಬರುತ್ತಿವೆ. ಆತುರವಾಗಿ ನಿರ್ಧಾರ ಕೈಗೊಳ್ಳುವುದಿಲ್ಲ.ಚರ್ಚಿಸಿದ ಬಳಿಕ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.