ಬೆಳಗಾವಿ: ‘ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಜೂನ್ ಮೊದಲ ವಾರದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕುಲಸಚಿವ ಡಾ.ಎ.ಎಸ್. ದೇಶಪಾಂಡೆ ತಿಳಿಸಿದ್ದಾರೆ.
‘ವಿಟಿಯು ಸದಾ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೆ ವದಂತಿಗಳಿಗೆ ಕಿವಿಗೊಡಬಾರದು. ಪರೀಕ್ಷೆಯ ಬಗ್ಗೆ ರಾಜ್ಯ ಮಟ್ಟದಲ್ಲಿ ತೀರ್ಮಾನ ಆಗುವುದಿದೆ. ರಾಜ್ಯ ಸರ್ಕಾರವು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಸಭೆ ನಡೆಸಿ ನಿರ್ದೇಶನಗಳನ್ನು ನೀಡಬಹುದು. ಆ ಬಳಿಕ ಆದೇಶಕ್ಕೆ ಅನುಗುಣವಾಗಿ ತೀರ್ಮಾನ ತೆಗೆದುಕೊಂಡು ಸುತ್ತೋಲೆ ಹೊರಡಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ವಿದ್ಯಾರ್ಥಿಗಳು ಮುಂದಿನ ಆದೇಶದವರೆಗೂ ಜ್ಞಾನಾರ್ಜನೆ ನಿಲ್ಲಿಸಬಾರದು. ಆನ್ಲೈನ್ ವೇದಿಕೆಗಳಲ್ಲಿ ಕಲಿಕೆಯನ್ನು ಮುಂದುವರಿಸಬೇಕು. ಪರೀಕ್ಷೆ, ವೇಳಾಪಟ್ಟಿ ಹಾಗೂ ಆರೋಗ್ಯದ ವಿಷಯಗಳಲ್ಲಿ ಕಾಲೇಜುಗಳವರು ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು’ ಎಂದು ಸೂಚಿಸಿದ್ದಾರೆ.