ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ‘ಫ್ಯಾಕ್ಟ್ ಚೆಕ್‌’ ಘಟಕ ಸ್ಥಾಪನೆ: ಸಿದ್ದರಾಮಯ್ಯ

ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ, ಕಠಿಣ ಶಿಕ್ಷೆಗೆ ತುರ್ತು ಕ್ರಮಕ್ಕೆ ಸೂಚನೆ
Published 21 ಆಗಸ್ಟ್ 2023, 23:30 IST
Last Updated 21 ಆಗಸ್ಟ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ‘ಫ್ಯಾಕ್ಟ್ ಚೆಕ್’ (ಸುಳ್ಳು ಸುದ್ದಿ ಪತ್ತೆ) ಘಟಕ ಸ್ಥಾಪಿಸಲು ಅಗತ್ಯವಿರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಘಟಕ ರಚನೆಗೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದರು.

‘ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ಧ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿವೆ. ಇದರ ನಿಯಂತ್ರಣ ಅತ್ಯಗತ್ಯ’ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ, ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್‌ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ಮತ್ತು ವಿಶ್ಲೇಷಣಾ ತಂಡವನ್ನು ಒಳಗೊಳ್ಳಲಿದೆ. 

ಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ, ‘ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಮುಂದೆ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯಿದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಆಗಬೇಕು. ಈ ಘಟಕವನ್ನು ರಚಿಸಿ, ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು’ ಎಂದರು.

‘ಸಾಮಾಜಿಕ ಮಾಧ್ಯಮಗಳಲ್ಲಿ ಬೆಂಗಳೂರು ಪೊಲೀಸರು ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಆರಂಭಿಕ ಹಂತದಲ್ಲಿ ಐಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಇದನ್ನು ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು. ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅಭಿಪ್ರಾಯಪಟ್ಟರು.

ಸಚಿವ ಕೃಷ್ಣ ಬೈರೇಗೌಡ, ‘ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳು ಸುದ್ದಿ ಹರಡುವುದನ್ನು ನಿಯಂತ್ರಿಸುವ ಜೊತೆಗೆ, ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆ ಮಾಡಬೇಕು’ ಎಂದರು.

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT