ಬೆಂಗಳೂರು: ಮಾಜಿ ಮೇಯರ್ ಶಾರದಮ್ಮ, ಮಾಜಿ ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ನಗರಸಭೆಯ ಮಾಜಿ ಸದಸ್ಯ ರಾಮಾಂಜಿನಪ್ಪ, ಚಿಕ್ಕಬಾಣಾವಾರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತಪ್ಪ ಸೇರಿದಂತೆ ಹಲವು ಮುಖಂಡರು ಜೆಡಿಎಸ್ಗೆ ಸೇರಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮುಖಂಡರನ್ನು ಬರಮಾಡಿಕೊಂಡರು.
ಕುಮಾರಸ್ವಾಮಿ ಮಾತನಾಡಿ, ‘ದಾಸರಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ಗೆ ಒಳ್ಳೆಯ ನೆಲೆ ಇದೆ. ಮುಂದಿನ ಚುನಾವಣೆಯಲ್ಲಿ ಸಹ ಪಕ್ಷವು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು’ ಎಂದು ಭರವಸೆ ನೀಡಿದರು. ಶಾಸಕ ಆರ್.ಮಂಜುನಾಥ್ ಇದ್ದರು.