ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕನ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ ಅವರು, ಮತೀಯ ಭಾವನೆ ಕೆರಳಿಸುವಂತೆ ದ್ವೇಷ ಭಾಷಣ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಚಿಕ್ಕಪೇಟೆ ನಿವಾಸಿಯೊಬ್ಬರು ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಆಯೋಗದ ಸೂಚನೆಯಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
'ತೇಜಸ್ವಿ ಸೂರ್ಯ ಅವರಿಗೆ ನೋಟಿಸ್ ಜಾರಿಗೊಳಿಸಲಾಗುವುದು. ಅಗತ್ಯಬಿದ್ದರೆ ವಿಚಾರಣೆಗೆ ಕರೆಸಲಾಗುವುದು' ಎಂದು ಪೊಲೀಸರು ಹೇಳಿದರು.