ಬೆಂಗಳೂರು: ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ಉಚಿತವಾಗಿ ನೀಡುತ್ತಿದ್ದ ತಿಂಡಿ, ಊಟ ನಿಲ್ಲಿಸಿರುವ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಊಟ, ತಿಂಡಿ ನಿಲ್ಲಿಸಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ದೂರವಾಣಿ ಕರೆ ಮಾಡಿ ಮಾತನಾಡಿ, ‘ಊಟ, ತಿಂಡಿ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ದುರುಪಯೋಗವಾದ ಕಾರಣ ದರ ನಿಗದಿ ಮಾಡಲಾಗಿದೆ’ ಎಂದು ತಿಳಿಸಿದರು.
ಈ ವೇಳೆ, ‘ದುರುಪಯೋಗವಾಗದಂತೆ ಬಡವರಿಗೆ ಉಚಿತವಾಗಿ ಊಟ, ತಿಂಡಿ ನೀಡಿ. ದುರುಪಯೋಗಕ್ಕೆ ಅವಕಾಶ ಮಾಡಿಕೊಡುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ’ ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಈ ಕುರಿತು ಪರಿಶೀಲನೆ ನಡೆಸುವುದಾಗಿ ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರಿಗೆ ತಿಳಿಸಿದರು.
ಲಾಕ್ಡೌನ್ ನಿಂದ ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಹಲವಾರು ಕ್ಷೇತ್ರಗಳ ದುಡಿಯುವ ವರ್ಗದವರಿಗೆ ತೊಂದರೆಯಾಗಿದೆ. ಅವರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಅವರು ಒತ್ತಾಯಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು, ಪ್ರತಿಪಕ್ಷಗಳ ಸಲಹೆ, ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.