ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಜಾಗತಿಕ ಟೆಂಡರ್: ಡಿ.ಕೆ.ಶಿವಕುಮಾರ್

Published 3 ಆಗಸ್ಟ್ 2023, 9:41 IST
Last Updated 3 ಆಗಸ್ಟ್ 2023, 9:41 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಎಕ್ಸ್‌ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, 'ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜತೆ ನಿನ್ನೆ (ಬುಧವಾರ) ಚರ್ಚೆ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ' ಎಂದಿದ್ದಾರೆ.

'ಬೆಂಗಳೂರಿನಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದ್ದು, ಈ ರಸ್ತೆಗಳ ಮೂಲಕ ಬೆಂಗಳೂರಿಗೆ ಹೆಚ್ಚಿನ ವಾಹನಗಳು ಆಗಮಿಸಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಂಚಾರ ದಟ್ಟಣೆ ನಿವಾರಣೆಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರದ ಮೂಲಕ ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೇಕಾದ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವರ ಜತೆ ಚರ್ಚಿಸಿದ್ದೇನೆ'

'ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಲಹೆಗಳನ್ನೂ ನೀಡಿದ್ದಾರೆ. ಸುರಂಗ ರಸ್ತೆ, ಫ್ಲೈ ಓವರ್ ಅಥವಾ ಇತರೆ ಮಾದರಿ ಯೋಜನೆ ಜಾರಿ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ತಿಳಿಸಿದ್ದಾರೆ. ಈಗಾಗಲೇ ಜುಲೈ 14 ರಿಂದ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬಿಬಿಎಂಪಿಯಿಂದ ಎಕ್ಸ್‌ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆದಿದ್ದೇವೆ. ಆಗಸ್ಟ್ 8 ರಂದು ಕೊನೇ ದಿನವಾಗಿದೆ' ಎಂದು ಹೇಳಿದ್ದಾರೆ.

ಸಂಚಾರ ದಟ್ಟಣೆ ನಿಯಂತ್ರಣ ಮಾಡಿ ಬೆಂಗಳೂರಿನ ಚಿತ್ರಣ ಬದಲಿಸಬೇಕಿದೆ. ದೆಹಲಿ, ಮುಂಬೈ ನಗರಗಳಲ್ಲೂ ಸಂಚಾರ ದಟ್ಟಣೆ ಹೆಚ್ಚಾಗಿದ್ದರೂ, ಬೆಂಗಳೂರನ್ನು ಜಾಗತಿಕ ನಗರ ಎಂದು ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಕೇವಲ ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ಮಾತ್ರ ಹೆಚ್ಚಾಗಿ ಮಾತನಾಡುತ್ತಾರೆ. ಸಂಚಾರ ದಟ್ಟಣೆ ನಿವಾರಣೆಗೆ ಕಾರ್ಯಕ್ರಮ ರೂಪಿಸಲು ನಾವು ಸಜ್ಜಾಗುತ್ತಿದ್ದು, ಈಗಾಗಲೇ ಚೀನಾ, ಸಿಂಗಾಪುರ, ಇಸ್ರೇಲ್ ಸೇರಿದಂತೆ ಹತ್ತಾರು ಕಂಪನಿಗಳು ಬಂದು ತಮ್ಮ ವಿಚಾರ ತಿಳಿಸಿವೆ. ಈ ಕಂಪನಿಗಳಿಗೆ ಈಗಾಗಲೇ ಎಕ್ಸ್‌ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಕರೆಯಲಾಗಿರುವ ಟೆಂಡರ್‌ನಲ್ಲಿ ಭಾಗವಹಿಸಿ, ಇಡೀ ಯೋಜನೆ ಹೇಗೆ ಜಾರಿ ಮಾಡಬಹುದು ಎಂದು ವಿವರಿಸುವಂತೆ ತಿಳಿಸಿದ್ದೇವೆ' ಎಂದು ಮಾಹಿತಿ ನೀಡಿದ್ದಾರೆ.

ಆದಷ್ಟು ಬೇಗ ನೀರು ಹಂಚಿಕೆ ವಿವಾದ ಸಮಸ್ಯೆ ಬಗೆಹರಿಸಲು ಪ್ರಯತ್ನ: ನೀರು ಹಂಚಿಕೆ ವಿವಾದ ಸಂಬಂಧ ಕಾನೂನು ತಜ್ಞರ ಜತೆ ಸಭೆ ನಡೆಸಲಾಗಿದೆ. ಈವರೆಗೂ ನಾವು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮಹದಾಯಿ, ಕಾವೇರಿ, ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿಚಾರವಾಗಿ ಮಾಹಿತಿ ಪಡೆದಿದ್ದೇನೆ. ಉಳಿದ ವಿಚಾರವನ್ನು ಮುಖ್ಯಮಂತ್ರಿ ಅವರೊಂದಿಗೆ ಮತ್ತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಉಳಿದ ನಿರ್ದೇಶನ ನೀಡಲಾಗುವುದು. ನಮಗೆ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ. ಆದಷ್ಟು ಬೇಗ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.

ಬಿಡಿಎ ಪ್ರಕರಣಗಳ ಕುರಿತು ವಕೀಲರಿಂದ ಮಾಹಿತಿ: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ವಕೀಲರ ಜತೆಗೂ ಚರ್ಚೆ ಮಾಡಿ, ಎಷ್ಟು ಪ್ರಕರಣಗಳು ಬಾಕಿ ಉಳಿದಿವೆ, ಎಷ್ಟು ಪ್ರಕರಣ ದಾಖಲಾಗಿತ್ತು, ಎಷ್ಟು ಗೆಲ್ಲಲಾಗಿದೆ, ಎಷ್ಟು ಸೋತಿದ್ದೇವೆ ಎಂಬ ಮಾಹಿತಿ ಕೇಳಿದ್ದೇನೆ. ಇಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯೂ ಬಹಳ ಮುಖ್ಯ. ಸರ್ಕಾರದ ಆಡಳಿತ ಯಂತ್ರ ಬಲಿಷ್ಠವಾಗಿರುವಂತೆ ನೋಡಿಕೊಳ್ಳುತ್ತೇವೆ. ಸದ್ಯ 350 ಪ್ರಕರಣ ನಡೆಯುತ್ತಿವೆ ಎಂಬ ಮಾಹಿತಿ ಇದೆ. ಈ ವಿಚಾರವಾಗಿ ಮಾಹಿತಿ ಪಡೆದು, ಅವರ ಕಾರ್ಯವೈಖರಿ ನೋಡಿ ತೀರ್ಮಾನ ಮಾಡುತ್ತೇವೆ ತಿಳಿಸಿದ್ದಾರೆ.

2019-2023ರ ವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಯಾವ ಕಾರಣಕ್ಕೆ ವರದಿ ಕೇಳಿದ್ದೀರಿ ಎಂಬ ಪ್ರಶ್ನೆಗೆ, 'ಬಿಬಿಎಂಪಿ ಕಾಮಗಾರಿಗಳ ಅಕ್ರಮದ ಬಗ್ಗೆ ಕೆಂಪಣ್ಣ ಅವರು ಪತ್ರ ಬರೆದಿದ್ದರು. ಸದನದ ಒಳಗೆ ಬಿಜೆಪಿ ಶಾಸಕರು ಅನೇಕ ಹೇಳಿಕೆ ನೀಡಿದ್ದರು. ಲೋಕಾಯುಕ್ತ ಸಂಸ್ಥೆ ಕೂಡ ಕೆಲವು ಕಾಮಗಾರಿ ವಿಚಾರವಾಗಿ ತನ್ನದೇ ವರದಿ ನೀಡಿದೆ. ಹೀಗಾಗಿ ಬಿಬಿಎಂಪಿ ಕಾಮಗಾರಿಗಳಲ್ಲಿ ನೈಜತೆ ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡಬೇಕು ಎಂಬ ಸಲಹೆ ಬಂದಿವೆ. ಈ ಬಗ್ಗೆ ತನಿಖೆ ಮಾಡುವಂತೆ ಬಿಜೆಪಿ ಶಾಸಕರೇ ಸಲಹೆ ನೀಡಿದ್ದಾರೆ. ಅವರ ಸಲಹೆ ಗಮನದಲ್ಲಿಟ್ಟುಕೊಂಡು ವಾಸ್ತವಾಂಶ ಅರಿಯಲು ವರದಿ ಕೇಳಿದ್ದೇನೆ. ಅನೇಕರು ಹಲವು ವರ್ಷಗಳಿಂದ ಬಿಲ್‌ಗಾಗಿ ಕಾಯುತ್ತಿದ್ದಾರೆ. ಯಾರು ಕೆಲಸ ಕೊಟ್ಟಿದ್ದಾರೆ? ಯಾವ ಕೆಲಸ ಆಗಿದೆ, ಅದರ ಗುಣಮಟ್ಟ ಏನಿದೆ? ಎಂದು ಪರಿಶೀಲನೆ ಆಗಬೇಕು. ಈ ವರದಿ ಬಂದ ನಂತರ ವಿವರವಾಗಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT