ಸರ್ಕಾರದ ಬಳಿ ಬರ ಪರಿಸ್ಥಿತಿ ನಿಭಾಯಿಸಲು ಹಣವಿಲ್ಲ. ಗ್ಯಾರಂಟಿ ಬಗ್ಗೆ ಅಬ್ಬರದ ಪ್ರಚಾರ ಮಾಡುತ್ತಿದೆಯೇ ಹೊರತು ಫಲಾನುಭವಿಗಳಿಗೆ ಕೊಡಲು ಹಣವಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿದೆ. ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ. ಕುಂಟುನೆಪ ಹೇಳಿಕೊಂಡು ಕಾಲ ಹರಣ ಮಾಡುತ್ತಿದ್ದಾರೆ. ಜನಸಾಮಾನ್ಯರ ಬಗ್ಗೆ ಕಾಳಜಿ ಮತ್ತು ಕಳಕಳಿ ಈ ಸರ್ಕಾರಕ್ಕೆ ಇಲ್ಲ ಎಂದು ಯಡಿಯೂರಪ್ಪ ಕಿಡಿಕಾರಿದರು.
ಅಭಿವೃದ್ಧಿ ಕೆಲಸಕ್ಕೆ ಒಂದು ಪೈಸೆ ಬಿಡುಗಡೆ ಮಾಡದೇ, ಇಲ್ಲ ಸಲ್ಲದ ನೆಪಗಳನ್ನು ಹೇಳುತ್ತಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಅಭಿವೃದ್ಧಿ ಹೊಂದಿದ ರಾಜ್ಯವಾಗಿತ್ತು. ಈಗ ಹಿಮ್ಮುಖವಾಗಿ ಚಲಿಸುತ್ತಿದೆ. ಬಹಳ ಕಾಲ ಇವರನ್ನು ಹೀಗೆ ಬಿಡಲು ಸಾಧ್ಯವಿಲ್ಲ. ನಮ್ಮೆಲ್ಲ ಮುಖಂಡರು ಸೇರಿ ಇವೆಲ್ಲದರ ವಿರುದ್ಧ ಹೋರಾಟ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.