ಶಿವಮೊಗ್ಗ: ಜೆಡಿಎಸ್-ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂಬ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸ್ಪಷ್ಟನೆ ನೀಡಲಿ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಒತ್ತಾಯಿಸಿದರು.
ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜೊತೆಯಾಗಿ ಹೆಜ್ಜೆ ಇಡುತ್ತಿವೆ. ಈ ಬೆಳವಣಿಗೆ ಬಿಜೆಪಿಗೂ ಅನಿವಾರ್ಯವಾಗಿದೆ ಎಂದು ಕಟುಕಿದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಹಿರಂಗಪಡಿಸುವುದಾಗಿ ಮಾಧ್ಯಮಗಳ ಎದುರು ಪೆನ್ ಡ್ರೈವ್ ತೋರಿಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಆ ಬಗ್ಗೆ ಸದನದಲ್ಲಿ ತುಟಿ ಬಿಚ್ಚಲಿಲ್ಲ. ಈ ರೀತಿಯ ಹಿಟ್ ಅಂಡ್ ರನ್ ವಿಚಾರದಿಂದ ಎರಡೂ ಪಕ್ಷಗಳ ಮುಖಂಡರು ವಿಚಲಿತರಾದಂತೆ ಕಾಣುತ್ತದೆ ಎಂದು ಛೇಡಿಸಿದರು.
ರೈತರ ಆತ್ಮಹತ್ಯೆಯ ಬಗ್ಗೆಯೂ ಸುಳ್ಳು ಹೇಳಲಾಗುತ್ತಿದೆ. ಕಳೆದ ವರ್ಷ ಏಪ್ರಿಲ್ ನಿಂದ ಜೂನ್ ವರೆಗೆ 216 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷ ಅದೇ ಅವಧಿಯಲ್ಲಿ 96 ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾನು ರೈತರ ಆತ್ಮಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ. ಆತ್ಮಹತ್ಯೆಯಂತಹ ಘೋರ ನಿರ್ಧಾರದ ಭಾವನೆಯಿಂದ ರೈತರನ್ನು ಹೊರ ತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು ರೈತರಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡುತ್ತಿದೆ ಎಂದರು.
ಹಾವೇರಿ ಜಿಲ್ಲೆಯೊಂದರಲ್ಲಿಯೇ ಮೇ, ಜೂನ್ ತಿಂಗಳಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸದನದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದು ವಿರೋಧ ಪಕ್ಷಗಳು ಉದ್ದೇಶ ಪೂರ್ವಕವಾಗಿ ಹೆಣೆದ ಷಡ್ಯಂತ್ರ ಎಂದರು.
'ನಾನು ಜೆಡಿಎಸ್ ತೊರೆಯಲು ಎಚ್.ಡಿ. ಕುಮಾರಸ್ವಾಮಿ ಅವರ ನಡವಳಿಕೆ ಕಾರಣ. ಅವರಿಂದಾಗಿಯೇ ಪ್ರತಿ ವರ್ಷ 10 ಜನ ಮುಖಂಡರು ಪಕ್ಷ ತೊರೆದು ಹೊರ ಬಂದಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.