ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೆದ್ದಾರಿ ಕಾಮಗಾರಿಯಿಂದಲೇ ರಾಮನಗರದಲ್ಲಿ ಪ್ರವಾಹ: ಕುಮಾರಸ್ವಾಮಿ

Last Updated 1 ಸೆಪ್ಟೆಂಬರ್ 2022, 10:37 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜಾನಿಕ ಕಾಮಗಾರಿಗಳಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೂರಿದರು.

ಚನ್ನಪಟ್ಟಣದಲ್ಲಿ ಗುರುವಾರ ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಹುಣಸನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಮೊದಲು ಒತ್ತುವರಿಯಾದ ನಾಲೆ, ಕಾಲುವೆ ತೆರವು ಮಾಡಲಿ ಎಂಬ ಪ್ರತಾಪ್ ಸಿಂಹ ಟ್ವೀಟ್ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಕೂಡ ಬೆಂಗಳೂರು ನಗರದ ವಿವಿಧ ಕಡೆ ಭೇಟಿ ನೀಡಿದ್ದಾರೆ. ಅಲ್ಲಿಯೂ ಸಹ ಮನೆಗಳಲ್ಲಿ ನೀರು ನಿಂತಿದೆ. ಯಾಕೆ ಎನ್ನುವುದನ್ನು ಪ್ರತಾಪ್ ಸಿಂಹ ಅರ್ಥ ಮಾಡಿಕೊಳ್ಳಬೇಕು. ಇದು ಈಗ ಆಗಿರುವ ತೊಂದರೆ ಅಲ್ಲ . ರಾಜಕೀಯ ಸ್ವೇಚ್ಛಾಚಾರದಿಂದ ಆಗಿರುವ ಅನಾಹುತಗಳಿವು. ಈ ಹಿಂದಿನ ಸರ್ಕಾರಗಳಲ್ಲಿ ಆಗಿರುವ ತಪ್ಪು ತೀರ್ಮಾನಗಳಿವು ಎಂದು ವಾಗ್ದಾಳಿ ನಡೆಸಿದರು‌.

ರಸ್ತೆಗಳಲ್ಲಿ ನೀರು ನಿಂತಿದೆಯಲ್ಲ, ಅದಕ್ಕೆ ಕಾರಣ ಯಾರು? ಅಕ್ರಮವಾಗಿ ನಿರ್ಮಾಣ ಆಗಿರುವುದನ್ನು ನಾವು ತೆರವು ಮಾಡಿಸುತ್ತೇವೆ. ಅದು ಒಂದು ಭಾಗ. ಆದರೆ, ಎಕ್ಸ್ ಪ್ರೆಸ್ ಹೈವೇ ಕಾಮಗಾರಿ ಪ್ರಾರಂಭ ಆದಮೇಲೆ ಈ ಸಮಸ್ಯೆ ಸೃಷ್ಟಿಯಾಗಿದೆ. ಪ್ರತಾಪ್ ಸಿಂಹ ಏನು ದೊಡ್ಡ ಎಂಜಿನಿಯರ್ ಏನ್ರೀ? ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಅದೆಲ್ಲೋ ಬರವಣಿಗೆ ಮಾಡಿಕೊಂಡು ಇದ್ದ ವ್ಯಕ್ತಿ ಪ್ರತಾಪ್ ಸಿಂಹ ಈಗ ನರೇಂದ್ರ ಮೋದಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರಿಂದ ನಾನು ಕಲಿಯಬೇಕಾ? ಅವರು ಸುಖಾ ಸುಮ್ಮನೆ ನನ್ನನ್ನು ಕೆರಳಿಸುವುದು ಬೇಡ. ಹೆದ್ದಾರಿಯಲ್ಲಿ ನೀರು ನಿಂತದ್ದು ಒತ್ತುವರಿಯಿಂದನಾ? ಅದು ಆಗಿರುವುದು ಕಳಪೆ ಕಾಮಗಾರಿಯಿಂದ ಎಂದು ಕಿಡಿಕಾರಿದರು.

ಇವರ ಹತ್ತಿರ ನಾನು ರಾಜಕೀಯ ಕಲಿಯಬೇಕಿಲ್ಲ. ಜನರ ಬದುಕೇನು ಎಂದು ಈತನಿಂದ ಕಲಿಯಬೇಕಿಲ್ಲ. ಜನರ ಕಷ್ಟ ಸುಖ ನೋಡಿ ರಾಜಕೀಯ ಮಾಡಿದ್ದರೆ ವಸ್ತುಸ್ಥಿತಿ ಏನೆಂದು ಗೊತ್ತಾಗುತ್ತಿತ್ತು. ಕೇವಲ ಬಿಜೆಪಿ, ಮೋದಿ ಹೆಸರಿನಲ್ಲಿ ರಾಜಕೀಯ ಮಾಡಿ ಸಂಸದ ಆಗಿದ್ದಾರೆ. ಕಷ್ಟಪಟ್ಟು ಎಂಪಿ ಸ್ಥಾನ ಪಡೆದಿಲ್ಲ ಎಂದು ಅವರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಯಾರಿಗಾದರೂ ದೂರು ನೀಡಲಿ ಎಂಬ ಸಿ.ಎಂ. ಬೊಮ್ಮಾಯಿ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ' ನಾನು ಮುಖ್ಯಮಂತ್ರಿಗೆ ಅಲ್ಲದೆ ಯಾರಿಗೆ ಹೇಳಲಿ? ನಾನು ಗಡ್ಕರಿಯವರ ಸಮಯ ಕೇಳಿದ್ದೇನೆ. ಎಕ್ಸ್ ಪ್ರೆಸ್ ಹೈವೇಯ ಎಲ್ಲಾ ವಿಡಿಯೋ ಮಾಡಿಸಿದ್ದೇನೆ. ಅದೆಲ್ಲವನ್ನು ಅವರಿಗೆ ತಲುಪಿಸುತ್ತೇನೆ, ಅವರು ತೀರ್ಮಾನ ಮಾಡಲಿ. ಮುಂದೆ ಜನ ರಸ್ತೆಗೆ ಬಂದು ದೊಣ್ಣೆ ಹಿಡಿದು ಕುಳಿತುಕೊಳ್ಳುವ ಕಾಲ ದೂರವೇನಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ' ಮೋದಿ ಯಾಕೆ ಬರುತ್ತಾರೆ? ಯಾವ ಅನುದಾನ ಕೊಡುತ್ತಾರೆ? 2019ರಿಂದ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ 35 - 40 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಎನ್ ಡಿ ಆರ್ ಎಫ್ ನಿಂದ ಕೇವಲ‌ 3 ಸಾವಿರ ಕೋಟಿ ಕೊಟ್ಟಿದ್ದಾರೆ. ಯಾವ ಪುರುಷಾರ್ಥಕ್ಕೆ ಅವರು ಬರುತ್ತಿದ್ದಾರೆ? ಎಂದು ಪ್ರಶ್ನಿಸಿದರು.

ಈಗ ಚುನಾವಣೆ ದೃಷ್ಟಿಯಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ತೆಗೆಯದಿದ್ದರೆ ಈ ಸಮಸ್ಯೆ ಪ್ರತಿವರ್ಷ ಬರುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅಪಾಯಕಾರಿ ಎಂದು ಕುಮಾರಸ್ವಾಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT