ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿಯಿಂದ ಜಾತಿ ದ್ವೇಷ ಸೃಷ್ಟಿಯಾಗುತ್ತದೆ ಎಂದ ಹೆಚ್‌.ಡಿ ಕುಮಾರಸ್ವಾಮಿ

ಸಮ್ಮಿಶ್ರ ಸರ್ಕಾರದಲ್ಲಿ ಕಾಂತರಾಜು ವರದಿ ಬಗ್ಗೆ ಸಿದ್ದರಾಮಯ್ಯ ಒಮ್ಮೆಯೂ ಚರ್ಚಿಸಿರಲಿಲ್ಲ–ಹೆಚ್‌.ಡಿ ಕುಮಾರಸ್ವಾಮಿ.
Published 8 ಅಕ್ಟೋಬರ್ 2023, 11:45 IST
Last Updated 8 ಅಕ್ಟೋಬರ್ 2023, 11:45 IST
ಅಕ್ಷರ ಗಾತ್ರ

ರಾಮನಗರ: ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಜಾತಿ ರಾಜಕೀಯ ಮಾಡಿಕೊಂಡೇ ಬರುತ್ತಿದೆ. ಇವರು ಜಾತಿಗಣತಿ ಮಾಡಿ ಏನು ಸಾಧನೆ ಮಾಡುತ್ತಾರೆ? ಅದರ ಉಪಯೋಗ ಏನು? ಸಮಾಜ ಹೊಡೆಯಲು, ದ್ವೇಷ ಸೃಷ್ಟಿಸಲು ಜಾತಿ ಗಣತಿ ಮಾಡುತ್ತೀರೋ ಅಥವಾ ಜಾತಿ ಬದಿಗಿಟ್ಟು ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುತ್ತೀರೋ? ಮೊದಲು ಜನರಿಗೆ ಅದನ್ನು ತಿಳಿಸಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಬಿಡದಿಯ ಕೇತಗಾನಹಳ್ಳಿಯಲ್ಲಿ ಭಾನುವಾರ ನಡೆದ ರಾಮನಗರ ಜಿಲ್ಲೆಯ‌‌ ಜೆಡಿಎಸ್ ಮುಖಂಡರ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಒಂದು ಕಡೆ ಜಾತ್ಯತೀತ ಎನ್ನುತ್ತಾರೆ, ಇನ್ನೊಂದು ಕಡೆ ಜಾತಿ ಗಣತಿ ವರದಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ. ಕಾಂತರಾಜು ಎಂಬುವವರಿಂದ ವರದಿ ಕೊಡಿಸಿದ್ದೀವಿ. ಕುಮಾರಸ್ವಾಮಿ ಅವರು ಒಪ್ಪಲಿಲ್ಲ ಎಂದು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಸದಸ್ಯ ಕಾರ್ಯದರ್ಶಿ ಸಹಿ ಇಲ್ಲದೆ ಆ ವರದಿಯನ್ನು ಸ್ವೀಕಾರ ಮಾಡುವುದು ಹೇಗೆ? ಎನ್ನುವ ಅರಿವು ಸಿಎಂ ಆದವರಿಗೆ ಇಲ್ಲ ಎಂದು ಅವರು ತಿರುಗೇಟು ನೀಡಿದರು.

ಮಾತೆತ್ತಿದರೆ ನನ್ನ ಕಡೆ ಬೆರಳು ತೋರಿಸುವ ಅವರು, ಆ ಸಂದರ್ಭದಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಒಮ್ಮೆಯಾದರೂ ಕಾಂತರಾಜು ವರದಿ ಬಗ್ಗೆ ಚರ್ಚೆ ಮಾಡಿಲ್ಲ. ಪ್ರತಿ ಸಭೆಯಲ್ಲಿಯೂ ಟವೆಲ್ ಕೊಡವಿ ಎದ್ದು ಹೋಗುತ್ತಿದ್ದರು. ಒಮ್ಮೆಯೂ ಈ ಬಗ್ಗೆ ಮುಖ್ಯಮಂತ್ರಿಯಾಗಿದ್ದ ನನ್ನ ಬಳಿ 14 ತಿಂಗಳಲ್ಲಿ ಒಮ್ಮೆಯೂ ಚರ್ಚೆ ನಡೆಸಲೇ ಇಲ್ಲ ಎಂದು ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದರು.

ಜಾತಿಗಣತಿ ಮುಖ್ಯವಲ್ಲ, ಎಲ್ಲ ಜಾತಿಯಲ್ಲಿರುವ ಬಡವರಿಗೆ ಅನುಕೂಲ ಮಾಡಿಕೊಡಬೇಕು. ಜಾತಿ ಎನ್ನುವ ಪದ ತೆಗೆದುಹಾಕಿ ಎಂದು ಹೇಳುತ್ತಾರೆ, ಜಾತ್ಯತೀತ ಸಮಾಜ ನಿರ್ಮಾಣ ಮಾಡೋಣ ಎಂದು ಭಾಷಣ ಬಿಗಿಯುತ್ತಾರೆ. ಅದರ ಅರ್ಥವೇನು? ಜಾತ್ಯತೀತ ಅಂದರೆ ಜಾತಿಯ ವ್ಯವಸ್ಥೆ ತೆಗೆದುಹಾಕಬೇಕು ಎಂದಲ್ಲವೇ? ಆದರೆ, ಕಾಂಗ್ರೆಸ್ ಪಕ್ಷಕ್ಕೆ ಜಾತಿ ವ್ಯವಸ್ಥೆ ಎನ್ನುವುದು ವೋಟ್ ಬ್ಯಾಂಕ್ ರಾಜಕೀಯಕ್ಕೆ ಇರುವ ಸಾಧನ ಎಂದು ಟೀಕಾಪ್ರಹಾರ ನಡೆಸಿದರು.

ಪಕ್ಷದ ರಾಮನಗರ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಮುಂತಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT