ಚನ್ನಪಟ್ಟಣ (ರಾಮನಗರ): ‘ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಾದ ಬಳಿಕ, ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಬದಲು ಬಿಜೆಪಿ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದಾರೆ. ಬಿಜೆಪಿಯವರು ಕುಮಾರಸ್ವಾಮಿ ಅವರನ್ನು ತಮ್ಮ ಪಕ್ಷದ ವಕ್ತಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಜೆಡಿಎಸ್ ಈಗ ಇಲ್ಲವಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಪಟ್ಟಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಅವರು ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದು ಹೇಳುತ್ತಿದ್ದಾರೆಯೇ ಹೊರತು, ತಮ್ಮ ಪಕ್ಷವನ್ನು ಬಲಪಡಿಸಿ ಎಂದು ಹೇಳುತ್ತಿಲ್ಲ. ತೆನೆ ಹೊತ್ತ ಮಹಿಳೆ ಅದನ್ನು ಬಿಸಾಕಿ ಹೋಗುವಂತೆ ಬಿಜೆಪಿಯವರು ಮಾಡಿದ್ದಾರೆ’ ಎಂದರು.
‘ಲೋಕಸಭಾ ಚುನಾವಣೆ ಬಳಿಕ ಆ ಪಕ್ಷದ ಪರಿಸ್ಥಿತಿ ಏನಾಗುತ್ತದೆ ಎಂದು ಕುಮಾರಣ್ಣನೇ ಹೇಳಬೇಕು. ಗೌಡರು ಕಷ್ಟಪಟ್ಟು ಕಟ್ಟಿದ ಪಕ್ಷದ ಸ್ಥಿತಿ ನೋಡಿ ನನಗೂ ನೋವಾಗುತ್ತದೆ. ನಾವು, ಜೆಡಿಎಸ್ನವರೇ ಜಗಳವಾಡುತ್ತಿದ್ದೆವೇ ಹೊರತು ಬಿಜೆಪಿಯವರಲ್ಲ. ಅವರ ಈಗಿನ ಸ್ಥಿತಿ ಕಂಡು ವ್ಯಥೆಯಾಗುತ್ತಿದೆ’ ಎಂದು ಹೇಳಿದರು.