ಈ ಸಪ್ತಾಹಕ್ಕೆ ಮಂಗಳವಾರ ಚಾಲನೆ ಸಿಕ್ಕಿದ್ದು, ಇಲಾಖೆಯು ರಾಜ್ಯದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ‘ತಾಯಿಯ ಎದೆಹಾಲಿನಲ್ಲಿ ಮಗುವಿನ ಬೆಳವಣಿಗೆಗೆ ಬೇಕಾದ ಪೌಷ್ಟಿಕತೆ, ಖನಿಜಾಂಶ ಮತ್ತು ಹೇರಳವಾದ ನೀರಿನ ಅಂಶಗಳು ಅಡಕವಾಗಿವೆ. ಮಗುವಿಗೆ ಇದು ಮೊದಲ ಲಸಿಕೆಯಾಗಲಿದೆ. ಮೊದಲ ಮೂರು ದಿನದ ಹಾಲಿನಲ್ಲಿ ಹೆಚ್ಚು ರೋಗನಿರೋಧಕಗಳಿರಲಿದ್ದು, ಮಗುವಿಗೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದೇ ರೀತಿ, ಸೋಂಕುಗಳಿಂದ ರಕ್ಷಣೆ ನೀಡುತ್ತದೆ. ಜನಿಸಿದ ಒಂದು ಗಂಟೆಯೊಳಗೆ ಹಾಲುಣಿಸಲು ಪ್ರಾರಂಭಿಸಿ, ಆರು ತಿಂಗಳವರೆಗೆ ಎದೆಹಾಲನ್ನು ಮಾತ್ರ ನೀಡಬೇಕು’ ಎಂದು ಇಲಾಖೆಯ ಮಕ್ಕಳ ಆರೋಗ್ಯ ವಿಭಾಗದ ಉಪನಿರ್ದೇಶಕರು ತಿಳಿಸಿದ್ದಾರೆ.