ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈದಿಗಳಿಗೆ ಅತ್ಯುತ್ತಮ ವಿಡಿಯೊ ಕಾನ್ಫರೆನ್ಸ್‌ ವ್ಯವಸ್ಥೆ ಕಲ್ಪಿಸಲು ನಿರ್ದೇಶನ

Published 21 ಮಾರ್ಚ್ 2024, 23:48 IST
Last Updated 21 ಮಾರ್ಚ್ 2024, 23:48 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಎಲ್ಲ ಜೈಲುಗಳಲ್ಲಿರುವ ಕೈದಿಗಳು ತಮ್ಮ ವಕೀಲರ ಜೊತೆ ಸಂಭಾಷಣೆ ನಡೆಸಲು ಅನುವಾಗುವಂತೆ ಅತ್ಯುತ್ತಮವಾದ ವಿಡಿಯೊ ಕಾನ್ಫರೆನ್ಸಿಂಗ್ ವ್ಯವಸ್ಥೆಯನ್ನು ಕಲ್ಪಿಸಿ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸುಳ್ಯ ತಾಲ್ಲೂಕಿನ ಎತ್ತಿನಹೊಳೆಯ ಅಬ್ದುಲ್‌ ಬಷೀರ್‌ (ಸದ್ಯ ಬಳ್ಳಾರಿ ಜೈಲಿನಲ್ಲಿ ಕೈದಿ) ಸೇರಿದಂತೆ ಬಳ್ಳಾರಿ, ಧಾರವಾಡ, ಶಿವಮೊಗ್ಗ, ಮೈಸೂರು, ವಿಜಯಪುರ ಮತ್ತು ಕಲಬುರಗಿ ಜೈಲುಗಳಲ್ಲಿರುವ ಒಟ್ಟು 13 ಜನ ಆರೋಪಿಗಳು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ವಿಭಾಗದ ಐಜಿಪಿ ಹಾಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರ ಪರ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್‌ ವಿ.ಜಿ.ಭಾನುಪ್ರಕಾಶ್‌ ಮತ್ತು ಎನ್‌ಐಎ ಪರವಾಗಿ ವಾದ ಮಂಡಿಸಿದ್ದ ಪಿ.ಪ್ರಸನ್ನಕುಮಾರ್ ಅರ್ಜಿದಾರರ ಮನವಿಯನ್ನು ತೀವ್ರವಾಗಿ ಆಕ್ಷೇಪಿಸಿದ್ದರು.

‘ಅರ್ಜಿದಾರರನ್ನು ಒಂದೇ ಕಡೆ ಇರಿಸಿದಲ್ಲಿ ಅವರೆಲ್ಲಾ ಮತ್ತೊಂದು ಪಿತೂರಿ ನಡೆಸಲು ಸಿದ್ದತೆ ಮಾಡಿಕೊಳ್ಳಬಹುದು. ಅಂತೆಯೇ ಅವರು ಈಗಿರುವ ಜೈಲುಗಳಲ್ಲಿ, ಅವರ ಮೇಲೆ ಯಾವುದೇ ರೀತಿಯ ಹಲ್ಲೆ ನಡೆದಿಲ್ಲ. ಅರ್ಜಿದಾರರ ಕತೆಗಳನ್ನೆಲ್ಲಾ ನಂಬಬಾರದು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

‘ರಾಜ್ಯದ ಎಲ್ಲಾ ಜೈಲುಗಳಲ್ಲಿ ವಿಡಿಯೊ ಕಾನ್ಪರೆನ್ಸ್ ವ್ಯವಸ್ಥೆಯಿದೆ. ಅವರಿಗೆ ಅಗತ್ಯವಿದ್ದ ಸಂದರ್ಭದಲ್ಲಿ ಅದನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಬೆಂಗಳೂರಿನ ಕೇಂದ್ರ ಕಾರಾಗೃಹ ಕೇವಲ 4 ಸಾವಿರ ಕೈದಿಗಳ ಸಾಮರ್ಥ್ಯ ಹೊಂದಿದ್ದು ಇಲ್ಲೀಗ 5,200 ಕೈದಿಗಳನ್ನು ಇರಿಸಲಾಗಿದೆ. ಎಲ್ಲ ಅರ್ಜಿದಾರರನ್ನು ಬೆಂಗಳೂರಿನ ಕಾರಾಗೃಹಕ್ಕೆ ಸ್ಥಳಾಂತರ ಮಾಡುವುದು ಉತ್ತಮ ಬೆಳವಣಿಗೆಯಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

‘ನಮಗೆಲ್ಲಾ ಜೀವ ಭಯ ಇದೆ. ಹಾಗಾಗಿ, ನಾವೆಲ್ಲಾ ನಮ್ಮ ವಕೀಲರ ಜೊತೆ ಚರ್ಚೆ ನಡೆಸಲು ನಮ್ಮನ್ನೆಲ್ಲಾ ಒಂದೇ ಜೈಲಿಗೆ ಸ್ಥಳಾಂತರ ಮಾಡಲು ನಿರ್ದೇಶಿಸಬೇಕು’ ಎಂಬ ಅರ್ಜಿದಾರರ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ. ‘ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಎಲ್ಲ ಆರೋಪಿಗಳು ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರಾಗಿದ್ದಾರೆ. ಒಬ್ಬ ಕೈದಿ ಈಗಾಗಲೇ ತಪ್ಪು ಒಪ್ಪಿಕೊಂಡಿರುವುದರಿಂದ ಇನ್ನಿತರರನ್ನೂ ಒಂದೇ ಕಡೆ ಇರಿಸುವುದು ಸೂಕ್ತವಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

‘ವಕೀಲರು ಹಾಗೂ ಕುಟುಂಬದ ಸದಸ್ಯರೊಂದಿಗೆ ನಡೆಸುವ ಸಂಭಾಷಣೆ ಮತ್ತೊಬ್ಬರಿಗೆ ತಿಳಿಯದಂತೆ ಗೋಪ್ಯತೆ ಕಾಪಾಡಬೇಕು. ಇದಕ್ಕಾಗಿ ಅವರಿಗೆ ಹೆಡ್‌ ಫೋನ್‌ಗಳನ್ನು ಒದಗಿಸಬೇಕು. ಇಂತಹ ಸೌಲಭ್ಯಗಳು ಯಾವ ಜೈಲಿನಲ್ಲಿ ಇಲ್ಲವೊ ಅಲ್ಲೆಲ್ಲಾ ಈ ಸೌಲಭ್ಯ ಕಲ್ಪಿಸಲು ಸರ್ಕಾರ ಶೀಘ್ರವೇ ಮುಂದಾಗಬೇಕು. ಎಲ್ಲಿ ಇಂತಹ ವ್ಯವಸ್ಥೆ ಇದೆಯೊ ಅಲ್ಲಿ ದೋಷರಹಿತವಾಗಿ ಕಾರ್ಯನಿರ್ವಹಣೆಗೆ ನಿರ್ದೇಶಿಸಬೇಕು’ ಎಂದು ಆದೇಶದಲ್ಲಿ ವಿವರಿಸಿದೆ.

‍ಪ್ರಕರಣ: 2022ರ ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲು ಒಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT