ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ನೇತೃತ್ವದ ಉನ್ನತಾಧಿಕಾರದ ವಿಚಕ್ಷಣಾ ಮತ್ತು ಮೇಲ್ವಿಚಾರಣಾ ಸಮಿತಿಯು ಸಭೆ ನಡೆಸದೇ ಇರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನೆ ಸಂಸ್ಥೆಯು ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
‘ಪ್ರತಿ ವರ್ಷದ ಜನವರಿ ಮತ್ತು ಜುಲೈನಲ್ಲಿ ಸಭೆ ನಡೆಸುವುದು ಕಾನೂನಿನ ಅಡಿಯಲ್ಲಿ ಕಡ್ಡಾಯ. ಆದರೆ, 2022ರಲ್ಲಿ ಮುಖ್ಯಮಂತ್ರಿ ನೇತೃತ್ವದ ಸಮಿತಿಯು ಒಂದೇ ಒಂದು ಬಾರಿಯೂ ಸಭೆ ನಡೆಸಿಲ್ಲ. 2023ರಲ್ಲಿಯೂ ಈತನಕ ಸಭೆ ನಡೆಸಲಾಗಿಲ್ಲ‘ ಎಂದು ನ್ಯಾಯಪೀಠ ಆಕ್ಷೇಪಿಸಿದೆ.
‘ಜಿಲ್ಲಾ ಮತ್ತು ಉಪ ವಿಭಾಗೀಯ ಮಟ್ಟದ ಸಮಿತಿಯು ಸಭೆ ನಡೆಸದೇ ಇರುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿ ಮೇಲ್ನೋಟಕ್ಕೆ ತೃಪ್ತಿದಾಯಕವಾಗಿಲ್ಲ‘ ಎಂದು ಹೇಳಿರುವ ನ್ಯಾಯಪೀಠ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.