ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೀಸಲಾದ ವರ್ಗದಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರು ಸ್ನಾತಕೋತ್ತರ ವಿದ್ಯಾರ್ಥಿನಿಯರ ನೆರವಿಗೆ ಬಾರದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಉದಾಸೀನ ನಿಲುವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಅರ್ಜಿದಾರ ವಿದ್ಯಾರ್ಥಿನಿಯರ ಶುಲ್ಕದ ಜೊತೆಗೆ ತಲಾ ₹25 ಸಾವಿರ ವ್ಯಾಜ್ಯದ ವೆಚ್ಚ ನೀಡುವಂತೆ ಆದೇಶಿಸಿದೆ.
ಈ ಸಂಬಂಧ, ‘ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್’ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಹಾಗೂ ಇತರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
‘ಅರ್ಜಿದಾರ ವಿದ್ಯಾರ್ಥಿನಿಯರು ಭರಿಸಬೇಕಿದ್ದ ಕಾಲೇಜು ಶುಲ್ಕವು ಯಾವುದೇ ಒಂದು ಸರ್ಕಾರಿ ಕಚೇರಿಯಲ್ಲಿನ ನೌಕರ ಪಡೆಯಬಹುದಾದ ಸಾರಿಗೆ ಮತ್ತು ತುಟ್ಟಿ ಭತ್ಯೆಗೆ ಸಮಾನವಾದುದು. ಆದರೆ, ಅಂದಂದಿನ ತುತ್ತು ಅನ್ನವನ್ನು ಅಂದೇ ದುಡಿದು ತಿನ್ನುವ ಬಡವರ್ಗದ ವಿದ್ಯಾರ್ಥಿನಿಯರ ಶೈಕ್ಷಣಿಕ ಧನಸಹಾಯ ಕೋರಿದ ಅರ್ಜಿಗಳನ್ನು ಕಳೆದ 10 ತಿಂಗಳಿನಿಂದ ಶೈತ್ಯಾಗಾರದಲ್ಲಿ ಇರಿಸಿದ ನಿಮ್ಮ ನಿಲುವು ಭಯಾನಕವಾಗಿದೆ’ ಎಂದು ನ್ಯಾಯಪೀಠ ಕಲ್ಯಾಣ ಮಂಡಳಿ ಅಧಿಕಾರಿಗಳಿಗೆ ಬೆವರಿಳಿಸಿದೆ.
ಕಲ್ಯಾಣ ಮಂಡಳಿ ಪರವಾಗಿ ಹಾಜರಿದ್ದ ವಕೀಲ ಬಿ.ಎನ್.ಪ್ರಶಾಂತ್, ‘ಮಂಡಳಿಯ ಈ ಹಿಂದಿನ ತೀರ್ಮಾನದಂತೆ ಕೇವಲ ₹10 ಸಾವಿರ ಹಾಗೂ ₹11 ಸಾವಿರವನ್ನು ಮಾತ್ರವೇ ಪಾವತಿಸಲು ಸಾಧ್ಯ’ ಎನ್ನುವ ಅಭಿಪ್ರಾಯವನ್ನು ತಳ್ಳಿ ಹಾಕಿರುವ ನ್ಯಾಯಪೀಠ, ‘ಸರ್ಕಾರದ ಅಧಿಸೂಚನೆ ಅನುಸಾರ ಅರ್ಜಿದಾರ ವಿದ್ಯಾರ್ಥಿನಿಯರು ಹೆಚ್ಚಿನ ಧನಸಹಾಯ ಪಡೆಯಲು ಅರ್ಹರಿದ್ದಾರೆ’ ಎಂದು ಹೇಳಿದೆ.
‘ಕಾರ್ಮಿಕರ ಶ್ರಮದಿಂದ ಸಂಗ್ರಹವಾಗಿರುವ ₹8,200 ಕೋಟಿ ಕಲ್ಯಾಣ ನಿಧಿ ಇದ್ದರೂ ಅವರ ಮಕ್ಕಳಿಗೆ ನ್ಯಾಯಬದ್ದವಾಗಿ ನೀಡಬೇಕಾದ ಶೈಕ್ಷಣಿಕ ಧನಸಹಾಯವನ್ನು ನಿರಾಕರಿಸಿರುವುದನ್ನು ಯಾವ ಕಾರಣದಿಂದಲೂ ಸಮರ್ಥನೆ ಮಾಡಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರರ ಪರ ವಕೀಲ ಆದಿತ್ಯ ಚಟರ್ಜಿ ವಾದ ಮಂಡಿಸಿದರು.
* ಬಡ ವಿದ್ಯಾರ್ಥಿನಿಯರ ಅರ್ಜಿಗೆ ಸ್ಪಂದಿಸಿದ ಹೈಕೋರ್ಟ್ * ಕಲ್ಯಾಣ ಮಂಡಳಿಯಲ್ಲಿರುವ ನಿಧಿ ₹8,200 ಕೋಟಿ * ಧನಸಹಾಯ ಕೋರಿದ ಅರ್ಜಿ ವಿಲೇವಾರಿಗೆ 10 ತಿಂಗಳ ವಿಳಂಬ
ಬಡ ಕಾರ್ಮಿಕರು ಅವರ ಮಕ್ಕಳು ತಮಗೆ ಸಿಗಬೇಕಾದ ನ್ಯಾಯಬದ್ಧ ಧನಸಹಾಯ ಪಡೆಯಲು ಕೋರ್ಟ್ ಮೆಟ್ಟಿಲು ಹತ್ತುವಂತೆ ಮಾಡಿರುವುದು ಅಕ್ಷಮ್ಯ. ಬಿರು ಬಿಸಿಲಿನಲ್ಲಿ ಬೆವರು ಸುರಿಸುವವರ ಬಗ್ಗೆ ಕಲ್ಯಾಣ ಮಂಡಳಿ ಅಶ್ರದ್ಧೆ ಅಕ್ಷಮ್ಯ.ಎಂ.ನಾಗಪ್ರಸನ್ನ ನ್ಯಾಯಮೂರ್ತಿ
ಹಣ ಪಾವತಿಗೆ ಖಡಕ್ ತಾಕೀತು ‘ಅರ್ಜಿದಾರ ವಿದ್ಯಾರ್ಥಿನಿಯರಲ್ಲಿ ಅಂಕಿತಾ ಎಲ್ಎಲ್ಬಿ ಹಾಗೂ ಅಮೃತಾ ಎಂಬಿಎ ಪದವೀಧರರಿದ್ದಾರೆ. ಇವರಿಬ್ಬರೂ ವಿದ್ಯಾರ್ಥಿನಿಯರು ಈಗಾಗಲೇ ಹೇಗೋ ಹೆಣಗಾಡಿ ₹30 ಸಾವಿರ ಮತ್ತು ₹35 ಸಾವಿರ ಶುಲ್ಕವನ್ನು ಸ್ವಂತ ಖರ್ಚಿನಲ್ಲಿ ಭರ್ತಿ ಮಾಡಿದ್ದಾರೆ. ಅವರು ಕೋರಿರುವ ಮೊತ್ತದ ಶುಲ್ಕವನ್ನು ಮಧ್ಯಂತರ ಆದೇಶ ನೀಡಿರುವ ನಾಲ್ಕು ವಾರದೊಳಗೆ ಅವರ ಖಾತೆಗೆ ಪಾವತಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ. ‘ಒಂದು ವೇಳೆ ವ್ಯಾಜ್ಯದ ವೆಚ್ಚ ಸಹಿತ ಈ ಹಣವನ್ನು ವಿದ್ಯಾರ್ಥಿಗಳ ಖಾತೆಗೆ ನಿಗದಿತ ಅವಧಿಯೊಳಗೆ ಪಾವತಿಸಲು ವಿಫಲವಾದರೆ ನಂತರದ ಪ್ರತಿ ದಿವಸಕ್ಕೂ ₹500 ಗಳನ್ನು ಪ್ರತಿ ವಿದ್ಯಾರ್ಥಿನಿಗೆ ದಂಡದ ರೂಪದಲ್ಲಿ ಪಾವತಿಸಬೇಕು’ ಎಂದು ಕಲ್ಯಾಣ ಮಂಡಳಿಗೆ ಖಡಕ್ ತಾಕೀತು ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.