ಚಿತ್ರದುರ್ಗ: ರಾಜ್ಯದಲ್ಲಿ ಶಿಕ್ಷಣ ಪಡೆಯುತ್ತಿರುವ ಅಫ್ಗಾನಿಸ್ತಾನದ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಮಂಗಳವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ‘ಶಿಕ್ಷಣ ಪಡೆಯುವ ಉದ್ದೇಶದಿಂದ ಅಫ್ಗಾನಿಸ್ತಾನದ ಅನೇಕ ವಿದ್ಯಾರ್ಥಿಗಳು ರಾಜ್ಯದಲ್ಲಿದ್ದಾರೆ. ಇವರ ವಿಸಾ ಏನಾಗಿದೆ ಎಂಬುದನ್ನು ಪರಿಶೀಲಿಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
‘ಅಫ್ಗಾನಿಸ್ತಾನಕ್ಕೆ ಮರಳುವಂತೆ ವಿದ್ಯಾರ್ಥಿಗಳನ್ನು ದೇಶದಿಂದ ಹೊರಗೆ ತಳ್ಳಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂಬುದನ್ನು ಆಲೋಚಿಸಲಾಗುವುದು’ ಎಂದು ಹೇಳಿದರು.
‘ದೇಶದ ಉದ್ದಗಲಕ್ಕೂ ರಸ್ತೆ ನಿರ್ಮಾಣ ಮಾಡುವ ಕನಸು ಅನುಷ್ಠಾನಗೊಂಡಿದ್ದು ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿ. ಅವರ ಆಡಳಿತಾವಧಿಯಲ್ಲಿ ರೂಪಿಸಿದ ಹೆದ್ದಾರಿಗಳ ಹೆಸರನ್ನು ಕಾಂಗ್ರೆಸ್ ಬದಲಾವಣೆ ಮಾಡಿದೆ. ಅಧಿಕಾರಕ್ಕೆ ಬಂದಾಗ ನಾಮಫಲಕ ಬದಲಾವಣೆ ಮಾಡಿದ್ದು ಬಿಟ್ಟರೆ ಕಾಂಗ್ರೆಸ್ ಬೇರೆ ಅಭವೃದ್ಧಿ ಮಾಡಿಲ್ಲ. ಇಂದಿರಾ ಕ್ಯಾಂಟೀನ್ಗೆ ಅನ್ನಪೂರ್ಣೇಶ್ವರಿಯ ಹೆಸರು ಇಟ್ಟರೆ ತಪ್ಪೇನು’ ಎಂದು ಪ್ರಶ್ನಿಸಿದರು.