ಹಾವೇರಿ: ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯತ್ವ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಅನಂತಕುಮಾರ್ ಹೆಗಡೆ ಅವರನ್ನುದ್ದೇಶಿಸಿ ಹೇಳಿದ್ದಾರೆ.
ಹಾವೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಮನಸ್ಸಿಗೆ ಬಂದಂತಹ ಹೇಳಿಕೆ ನೀಡುತ್ತಿದ್ದಾರೆ. ಅವರು ಸಂಸದರಾಗಿ ಮಾಜಿ ಕೇಂದ್ರ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದರು.
ಕನಿಷ್ಠ ಪಕ್ಷ ಅನಂತಕುಮಾರ್ ಹೆಗಡೆ ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಎಂದು ಕಿಡಿಕಾರಿದರು.
ಅನಂತಕುಮಾರ್ ಹೆಗಡೆಯವರು ಏಕವಚನದಲ್ಲಿ ಮಾತನಾಡಲು ಪ್ರಚೋದಿಸಿದ್ದೇ ಸಿದ್ದರಾಮಯ್ಯ ಅವರು ಎಂದು ಪ್ರಲ್ಹಾದ ಜೋಶಿ ಸಮರ್ಥಿಸಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಪ್ರಲ್ಹಾದ ಜೋಶಿ ಅವರು ರಾಜಕೀಯವಾಗಿ ಆರೋಪ ಮಾಡುತ್ತಾನೇ ಇರುತ್ತಾರೆ ಎಂದು ನಿರ್ಲಕ್ಷಿಸಿದರು.