ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳಿಗೆ ಅಗತ್ಯವಾದ ಲಿಥಿಯಂ ಕೋಶಗಳ ತಯಾರಿಕೆಗೆ ಹೆಸರಾಗಿರುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿ (ಐಬಿಸಿ) ರಾಜ್ಯದಲ್ಲಿ ₹8,000 ಕೋಟಿ ಬಂಡವಾಳ ಹೂಡಲು ಆಸಕ್ತಿ ತೋರಿದೆ.
ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಕಂಪನಿಯ ಪ್ರತಿನಿಧಿಗಳೊಂದಿಗೆ ಸೋಮವಾರ ಪ್ರಾಥಮಿಕ ಹಂತದ ಮಾತುಕತೆ ನಡೆಸಿದರು.
'ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರ ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿದೆ. ಆದರೆ, ನಮ್ಮಲ್ಲಿ ಲಿಥಿಯಂ ಕೋಶಗಳ ಉತ್ಪಾದನೆ ನಡೆಯುತ್ತಿಲ್ಲ.ಈಗ ಐಬಿಸಿ ಕಂಪನಿ ಮುಂದೆ ಬಂದಿದ್ದು, ಇದೊಂದು ಉತ್ತಮ ಬೆಳವಣಿಗೆ' ಎಂದು ಪಾಟೀಲ ಹೇಳಿದರು.
'ಈ ಕಂಪನಿಯು ದೇವನಹಳ್ಳಿ ಬಳಿ ಇರುವ ಐಟಿಐಆರ್ ಪಾರ್ಕ್ನಲ್ಲಿ 100 ಎಕರೆ ಜಮೀನು ಕೇಳಿದೆ. ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂ ವಿಸ್ತೃತವಾಗಿ ಚರ್ಚಿಸಲಾಗುವುದು' ಎಂದೂ ತಿಳಿಸಿದರು.