ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಶಿವಣ್ಣ ಅವರಿಗೆ ಅಕ್ರಮವಾಗಿ ಡಾಕ್ಟರೇಟ್ ಪದವಿ ನೀಡಿದ ಆರೋಪದ ಕುರಿತು ತನಿಖೆ ನಡೆಸಲು ಮೂವರು ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಚಂದ್ರಶೇಖರ್ ಶೆಟ್ಟಿ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ರಾಜ್ಯ ಉನ್ನತ ಶಿಕ್ಷಣ ಪರಿಷತ್ನ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಜಿ. ಚಂದ್ರಶೇಖರ್ ಈ ಸಮಿತಿಯಲ್ಲಿದ್ದಾರೆ.
ಆರೋಪದ ಕುರಿತಂತೆ ವಿವರವಾದ ತನಿಖೆ ನಡೆಸಿ ಮೂರು ತಿಂಗಳ ಒಳಗೆ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಬಿ.ಎಸ್. ಶಿವಣ್ಣ ಅವರು ಅಲಯನ್ಸ್ ವಿಶ್ವವಿದ್ಯಾಲಯದಿಂದ ಅಕ್ರಮವಾಗಿ ಡಾಕ್ಟರೇಟ್ ಪದವಿ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿಜಯನಗರದ ಎಲ್. ಜಯಲಿಂಗೇಗೌಡ ಎಂಬುವವರು 2019ರ ಅ. 10ರಂದು ಸರ್ಕಾರಕ್ಕೆ ದೂರು ನೀಡಿದ್ದರು. ಈ ದೂರಿನ ಕುರಿತಂತೆ ಸೂಕ್ತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬಹುದು ಎಂದು 2019ರ ಡಿ. 13ರಂದು ಉನ್ನತ ಶಿಕ್ಷಣ ಪರಿಷತ್ನ ಕಾರ್ಯನಿರ್ವಾಹಕ ನಿರ್ದೇಶಕರು ಸರ್ಕಾರಕ್ಕೆ ವರದಿ ನೀಡಿದ್ದರು.