ಬೆಂಗಳೂರು: ಆದಾಯ ತೆರಿಗೆ ಇಲಾಖೆ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಂದ ಬಿಡುಗಡೆ ಮಾಡಬೇಕೆಂದು ಕೋರಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
‘ಕಳೆದ ಮೂರು ವರ್ಷಗಳಿಂದ ಆಸ್ತಿಗೆ ಸಂಬಂಧಿಸಿದ ಮಾಹಿತಿಯನ್ನು (ಐ.ಟಿ ರಿಟರ್ನ್ಸ್) ಸರಿಯಾಗಿ ಒದಗಿಸಿಲ್ಲ’ ಎಂದು ಆದಾಯ ತೆರಿಗೆ ಇಲಾಖೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದೆ.
ಆದರೆ, ‘ಆಸ್ತಿಗೆ ಸಂಬಂಧಿಸಿದಂತೆ ಸರಿಯಾದ ಮಾಹಿತಿ ಒದಗಿಸಲು ಇನ್ನು ಸಾಕಷ್ಟು ಕಾಲಾವಕಾಶವಿದೆ. ಐಟಿ ಅಧಿಕಾರಿಗಳು ತನಿಖೆ ನಡೆಸದೇ ತರಾತುರಿಯಲ್ಲಿ ದೂರು ದಾಖಲಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ’ ಎಂದು ಶಿವಕುಮಾರ್ ಹೇಳಿದ್ದಾರೆ.
ಶಿವಕುಮಾರ್ ಪರವಾಗಿ ಅವರ ವಕೀಲರು, ಈ ಅರ್ಜಿ ಸಲ್ಲಿಸಿದ್ದು, ಅದಕ್ಕೆ ಆಕ್ಷೇಪಣೆ ಸಲ್ಲಿಸಲು ಆದಾಯ ತೆರಿಗೆ ಇಲಾಖೆ ಪರ ವಕೀಲರಿಗೆ ಅಕ್ಟೋಬರ್ 26ರವರೆಗೆ ಅವಕಾಶ ನೀಡಲಾಗಿದೆ.