ಮಡಿಕೇರಿ: ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವುದು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.
ಹುಬ್ಬಳ್ಳಿಯಲ್ಲಿ ತೀರಾ ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುತ್ತಿದೆಯೆ ಹೊರತು ರಾಮಭಕ್ತರನ್ನು ಗುರಿಯಾಗಿಸಿ ಕ್ರಮ ಕೈಗೊಂಡಿಲ್ಲ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಜಾರಿ ನಿರ್ದೇಶನಾಲಯ ಸೇರಿದಂತೆ ಸರ್ಕಾರಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿರುವುದು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ಕಾಂಗ್ರೆಸ್ ಇದುವರೆಗೂ ಈ ಪರಿಯ ದ್ವೇಷದ ರಾಜಕಾರಣ ಮಾಡಿಲ್ಲ. ವಿರೋಧ ಪಕ್ಷದ ನಾಯಕರಿಗೆ ಗೌರವ ಕೊಟ್ಟಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನ ಕುರಿತು ಬಿಜೆಪಿಯ ಒಬ್ಬರೂ ಮಾತನಾಡುವುದಿಲ್ಲ. ಆದರೆ ಜನರ ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ಮಾತ್ರ ಅವರು ನೀಡುತ್ತಿದ್ದಾರೆ ಎಂದು ಹರಿಹಾಯ್ದರು.