ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಪಸ್‌ ಕರೆತರಲು 5 ತಿಂಗಳ ಪ್ರಯತ್ನ: ಜಗದೀಶ ಶೆಟ್ಟರ್‌

Published 26 ಜನವರಿ 2024, 15:19 IST
Last Updated 26 ಜನವರಿ 2024, 15:19 IST
ಅಕ್ಷರ ಗಾತ್ರ

ಬೆಂಗಳೂರು: ‘ನನ್ನನ್ನು ಮತ್ತೆ ಬಿಜೆಪಿ ಕರೆತರುವ ಪ್ರಯತ್ನ ಒಂದೆರಡು ದಿನಗಳು ಅಥವಾ ನಾಲ್ಕು ಗಂಟೆಗಳಲ್ಲಿ ಆದ ಬೆಳವಣಿಗೆ ಅಲ್ಲ. ಕಳೆದ ಐದಾರು ತಿಂಗಳಿಂದಲೂ ಆ ಪ್ರಯತ್ನ ನಡೆದಿತ್ತು’ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

‘ಬಿಜೆಪಿಗೆ ಮತ್ತೆ ಕರೆತರಬೇಕು ಎಂಬ ಒತ್ತಡ ಕಾರ್ಯಕರ್ತರಿಂದಲೂ ಇತ್ತು. ನನ್ನನ್ನೂ ಭೇಟಿ ಮಾಡಿ ಬಿಜೆಪಿಗೆ ಮರಳುವಂತೆ ಒತ್ತಾಯಿಸಿದ್ದರು. ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ ನಾಯಕರು ಮತ್ತು ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಮರಳಿದ್ದೇನೆ. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹಿರಿಯರು ಹೇಳಿದ್ದಾರೆ’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಅದಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪ್ರಯತ್ನ ಮಾಡುತ್ತೇವೆ. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪಕ್ಷದ ಸೂಚನೆಯಂತೆ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವೆ’ ಎಂದು ಅವರು ಹೇಳಿದರು.

‘ಇದು ನಮ್ಮ ಮನೆ, ನಾವು ಕಟ್ಟಿ ಬೆಳೆಸಿದ ಮನೆ. ನಮ್ಮ ಕುಟುಂಬ ಬಿಜೆಪಿ ಜತೆ ಆತ್ಮೀಯತೆ ಹೊಂದಿದೆ. ವಿಧಾನಸಭೆ ಚುನಾವಣೆ ವೇಳೆ ಕೆಲವೊಂದು ಘಟನೆಗಳು ನಡೆದ ಕಾರಣ ಕಾಂಗ್ರೆಸ್‌ ಸೇರಿದ್ದೆ. ಮೋದಿಯವರು 10 ವರ್ಷಗಳ ಉತ್ತಮ ಆಡಳಿತ ನೀಡಿದ್ದಾರೆ. ಒಳ್ಳೆಯ ಕೆಲಸಗಳನ್ನೂ ಮಾಡಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು. ಭಾರತವು ಆರ್ಥಿಕವಾಗಿ ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮಬೇಕು ಎಂಬ ಅಭಿಲಾಷೆ ದೇಶದ ಜನರದ್ದು. ಆ ಕಾರಣಕ್ಕೆ ಪಕ್ಷಕ್ಕೆ ಸಂತೋಷದಿಂದ ಬಂದಿದ್ದೇನೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ಕುಮಾರ್‌, ಪ್ರೀತಮ್‌ ಗೌಡ, ಪಿ.ರಾಜೀವ್‌, ವಿಧಾನಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT